ADVERTISEMENT

ಹೈಕೋರ್ಟ್ ಸೂಚನೆಯಂತೆ ಕರ್ತವ್ಯಕ್ಕೆ ಹಾಜರಾಗುತ್ತಿರುವ ನೌಕರರು, ಬಸ್ ಸಂಚಾರ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2021, 8:18 IST
Last Updated 21 ಏಪ್ರಿಲ್ 2021, 8:18 IST
ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಸಂಚಾರದಲ್ಲಿ ಬುಧವಾರ ಬೆಳಿಗ್ಗೆಯಿಂದ ಹೆಚ್ಚಳ
ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಸಂಚಾರದಲ್ಲಿ ಬುಧವಾರ ಬೆಳಿಗ್ಗೆಯಿಂದ ಹೆಚ್ಚಳ   

ಬೆಂಗಳೂರು: ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಸಂಚಾರದಲ್ಲಿ ಬುಧವಾರ ಬೆಳಿಗ್ಗೆಯಿಂದ ಹೆಚ್ಚಳವಾಗಿದೆ. ಹೈಕೋರ್ಟ್ ಸೂಚನೆ ಬಳಿಕ ಹೆಚ್ಚಿನ ಸಂಖ್ಯೆಯ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಸಾರಿಗೆ ನಿಗಮಗಳ ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಬೆಳಿಗ್ಗೆ 9 ಗಂಟೆಯ ವೇಳೆಗೆ ನಾಲ್ಕೂ ನಿಗಮಗಳಿಂದ 6,410 ಬಸ್ ಗಳು ಸಂಚಾರ ಆರಂಭಿಸಿವೆ. ಸಂಜೆಯ ವೇಳೆಗೆ ಪೂರ್ಣ ಪ್ರಮಾಣದಲ್ಲಿ ಬಸ್ ಸಂಚಾರ ಆರಂಭವಾಗುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಾರಿಗೆ ನಿಗಮಗಳ ನೌಕರರು ವೇತನ ಪರಿಷ್ಕರಣೆಗೆ ಆಗ್ರಹಿಸಿ ಮುಷ್ಕರ ನಡೆಸುತ್ತಿರುವುದಕ್ಕೆ ಹೈಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿತ್ತು. 'ಮುಷ್ಕರದ ಸಮಯ ಇದಲ್ಲ' ಎಂದಿದ್ದ ನ್ಯಾಯಾಲಯ, ಪ್ರತಿಭಟನೆ ಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ನೌಕರರಿಗೆ ಸೂಚಿಸಿತ್ತು.

ADVERTISEMENT

ಕರ್ನಾಟಕ ರಾಜ್ಯ ಈಶಾನ್ಯ ಸಾರಿಗೆ ನಿಗಮ (ಎನ್‌ಇಕೆಆರ್‌ಟಿಸಿ) ರಾಯಚೂರು ವಿಭಾಗೀಯ ನೌಕರರು ಕರ್ತವ್ಯಕ್ಕೆ ಹಾಜರಾಗುತ್ತಿದ್ದು ಈಗಾಗಲೇ ಕೇಂದ್ರ ಬಸ್ ನಿಲ್ದಾಣದಿಂದ ಬಸ್ಸುಗಳ ಸಂಚಾರ ಆರಂಭವಾಗಿದೆ.

ರಾಯಚೂರಿನಿಂದ ದೇವದುರ್ಗ ಲಿಂಗಸುಗೂರು, ಮಾನ್ವಿ, ಸಿಂಧನೂರು ಸೇರಿದಂತೆ ಜಿಲ್ಲೆಯಾದ್ಯಂತ ಬಸ್ಸುಗಳು ಸಂಚರಿಸುತ್ತಿವೆ. ಅಲ್ಲದೆ ನೆರೆಯ ಜಿಲ್ಲೆಗಳಾದ ಯಾದಗಿರಿ, ವಿಜಯಪುರ, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳಿಗೆ ಬಸ್ಸು ಸಂಚಾರ ಆರಂಭಿಸಿವೆ.
ಹೈಕೋರ್ಟ್ ಸಲಹೆ ಆಧರಿಸಿ ಕೆಲವು ನೌಕರರು ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಸಂಜೆ ಹೊತ್ತಿಗೆ‌ ಹಾಜರಾತಿ ಸಂಖ್ಯೆ ಹೆಚ್ಚಳವಾಗುವ ನಿರೀಕ್ಷೆ ಇದೆ. ಸದ್ಯ ಶೇ 30 ರಷ್ಟು ನೌಕರರು ಬಂದಿದ್ದಾರೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.