ಅನಂತ ಸುಬ್ಬರಾವ್
ಬೆಂಗಳೂರು: ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿ. ಅನಂತ ಸುಬ್ಬರಾವ್ (85) ಬುಧವಾರ ಸಂಜೆ ಹೃದಯಾಘಾತದಿಂದ ನಿಧನರಾದರು.
ವಿಜಯನಗರದಲ್ಲಿರುವ ತನ್ನ ಮನೆಯಲ್ಲಿ ಬುಧವಾರ ಸಂಜೆ ಸುಮಾರು 6 ಗಂಟೆಯ ಹೊತ್ತಿಗೆ ಸ್ನಾನ ಮಾಡಿ ಬಂದವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಕಾರ್ಮಿಕ ನಾಯಕ ವಿಜಯಭಾಸ್ಕರ್, ಮತ್ತು ಅನಂತ ಸುಬ್ಬರಾವ್ ಅವರ ಮೊಮ್ಮಗಳು ವೈದ್ಯರಿಗೆ ಕರೆ ಮಾಡಿದಾಗ ಕೂಡಲೇ ಆಸ್ಪತ್ರೆಗ ದಾಖಲಿಸುವಂತೆ ವೈದ್ಯರು ಸೂಚನೆ ನೀಡಿದ್ದರು. ಆಂಬುಲೆನ್ಸ್ ತರಿಸಿ ಆಸ್ಪತ್ರೆಗೆ ಒಯ್ಯುತ್ತಿದ್ದಾಗ ದಾರಿ ಮಧ್ಯೆ ಕೊನೆಯುಸಿರೆಳೆದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಮುಖಂಡರೂ ಆಗಿದ್ದ ಅವರು ನಾಲ್ಕು ಸಾರಿಗೆ ನಿಗಮಗಳ ನೌಕರರ ಬೇಡಿಕೆಗಳ ಈಡೇರಿಕೆಗಾಗಿ ಜ.29ರಂದು ಬೆಂಗಳೂರು ಚಲೋಗೇ ಕರೆ ನೀಡಿದ್ದರು. ಈ ಬಗ್ಗೆ ಬುಧವಾರವೂ ವಿವಿಧ ಸಾರಿಗೆ ಸಂಘಟನೆಗಳ ನಾಯಕರೊಂದಿಗೆ ಚರ್ಚಿಸಿದ್ದರು. ಸಂಜೆ ಶೇಷಾದ್ರಿಪುರ ರಸ್ತೆಯಲ್ಲಿರುವ ಸಂಘಟನೆಯ ಕಚೇರಿಯಲ್ಲಿ ಸೇರಿ ಮತ್ತೊಂದು ಸುತ್ತಿನ ಚರ್ಚೆ ನಡೆಸಲು ನಿರ್ಧರಿಸಿದ್ದರು. ಸಭೆಗೆ ತೆರಳುವ ಮುನ್ನವೇ ಉಸಿರಾಟದ ಸಮಸ್ಯೆ ಉಂಟಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಸುದೀರ್ಘ ನಾಲ್ಕು ದಶಕಗಳ ಕಾಲ ಕಾರ್ಮಿಕ ಮುಖಂಡರಾಗಿ ಅನೇಕ ಚಳವಳಿಗಳನ್ನು, ಹೋರಾಟವನ್ನು ಸಂಘಟಿಸಿದ್ದರು. ಅವರಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.