ಬೆಂಗಳೂರು: ‘ಸದನದಲ್ಲಿ ಜನರ ಸಮಸ್ಯೆಗಳಿಗೆ ಒಂಟಿಯಾಗಿಯೇ ಹೋರಾಟ ನಡೆಸಲಾಗುವುದು. ಬಿಜೆಪಿ ವಿರುದ್ಧ ಹೋರಾಡಲು ಯಾರ ಬೆಂಬಲವೂ ಬೇಕಿಲ್ಲ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಸದನದ ಒಳಗೆ ಕಾಂಗ್ರೆಸ್ಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ. ಯಾವ ರೀತಿ ಭಾಗವಹಿಸಬೇಕು, ಜನರ ಕಷ್ಟಗಳ ಬಗ್ಗೆ ಹೇಗೆ ಚರ್ಚೆ ಮಾಡಬೇಕು ಎಂಬುದು ಗೊತ್ತಿದೆ. ಅವರಿಗೆ ಬೆಂಬಲ ಕೊಟ್ಟು ಜಂಟಿಯಾಗಿ ಹೋರಾಟ ಮಾಡುವ ಅವಶ್ಯಕತೆ ಇಲ್ಲ ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.
‘ನೆರೆ ಸಂತ್ರಸ್ತರಿಗೆ ಬಿಜೆಪಿ ಸರ್ಕಾರ ಯಾವ ರೀತಿ ಸ್ಪಂದಿಸಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಆ ಬಗ್ಗೆ ಸದನದಲ್ಲೇ ಚರ್ಚೆ ಮಾಡಲಾಗುವುದು. ನೈಸರ್ಗಿಕ ವಿಕೋಪದ ಸಂದರ್ಭಗಳಲ್ಲಿ ರಾಜ್ಯಗಳಿಗೆ ಮೀಸಲಿಟ್ಟಿರುವ ಪಾಲನ್ನು ಮಾತ್ರ ಕೇಂದ್ರ ಕೊಡುತ್ತದೆ. ಕೆಲವೊಮ್ಮೆ ಹೆಚ್ಚಿನ ನೆರವು ನೀಡಲಾಗುತ್ತದೆ. ಕಳೆದ ಐದು ವರ್ಷಗಳಲ್ಲಿ ರಾಜಸ್ಥಾನ, ಮಹಾರಾಷ್ಟ್ರಕ್ಕೆ ಹೆಚ್ಚಿನ ಅನುದಾನ ನೀಡಿದ್ದು, ನಮಗೆ ಕಡಿಮೆ ನೆರವು ಕೊಟ್ಟಿದೆ. ಕೇಂದ್ರದ ಇಂದಿನ ಆರ್ಥಿಕ ಪರಿಸ್ಥಿತಿ ಗಮನಿಸಿದರೆ ಹೆಚ್ಚಿನ ನೆರವಿನ ನಿರೀಕ್ಷೆ ಇಟ್ಟುಕೊಳ್ಳಲು ಸಾಧ್ಯವಿಲ್ಲ’ ಎಂದು ಆರೋಪಿಸಿದರು.
ಪಕ್ಷ ಸಂಘಟನೆಗೆ ಒತ್ತು ನೀಡಬೇಕಿದೆ. ಮೈತ್ರಿ ಸರ್ಕಾರದ ಸಾಧನೆಗಳು, ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.