ADVERTISEMENT

ದೇಶವೆಂದರೆ ಮಣ್ಣಲ್ಲ, ಮನುಷ್ಯರು: ಹಿಂದೂ ಸಂಘಟನೆಗಳ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಏಪ್ರಿಲ್ 2022, 8:47 IST
Last Updated 1 ಏಪ್ರಿಲ್ 2022, 8:47 IST
ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ   

ಬೆಂಗಳೂರು: ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ ಸೃಷ್ಟಿಸುವುದನ್ನು ಸಹಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ‘ಕರಪತ್ರಗಳನ್ನು ಹಂಚಿ ಸಮಾಜ ಒಡೆಯುತ್ತಿರುವ ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ಬಗ್ಗೆ ನನ್ನ ಹೇಳಿಕೆಯಲ್ಲಿ ಯಾವ ಬದಲಾವಣೆಯೂ ಇಲ್ಲ. ಧರ್ಮ-ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ಇಂಥ ಸಂಘಟನೆಗಳ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲ. 'ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ' ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ' ಎಂದು ತಿಳಿಸಿದ್ದಾರೆ

‘ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ. ಇದು ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ಜಹಗೀರಲ್ಲ. ಇವೇನು ಹಿಂದೂಗಳ ಪ್ರಾತಿನಿಧಿಕ ಸಂಸ್ಥೆಗಳೂ ಅಲ್ಲ. ಒಂದು ರಾಜಕೀಯ ಪಕ್ಷದ ಬಾಲಂಗೋಚಿಗಳಷ್ಟೇ. ಹಿಂದೂ, ಹಿಂದುತ್ವ ಎನ್ನುವ ಪರಂಪರೆ ಇವರ ಗುತ್ತಿಗೆಯಲ್ಲ’ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

ADVERTISEMENT

'ಧರ್ಮೋ ರಕ್ಷತಿ ರಕ್ಷಿತಃ' ಎನ್ನುವುದರ ಅರಿವು ನನಗೂ ಇದೆ. ಧರ್ಮ ರಕ್ಷಣೆ ಎಂದರೆ ಇನ್ನೊಬ್ಬರ ಅನ್ನ ಕಸಿಯುವುದಲ್ಲ? ನೆಮ್ಮದಿಯ ನಾಡಿಗೆ ಕಿಚ್ಚಿಡುವುದಲ್ಲ? ಮನಸ್ಸುಗಳನ್ನು ಒಡೆದು ದೇಶವನ್ನು ʼಒಡೆದ ಮಡಿಕೆʼ ಮಾಡುವುದಲ್ಲ. ದೇಶವೆಂದರೆ ಮಣ್ಣಲ್ಲ, ಮನುಷ್ಯರು’ ಎಂದು ಟ್ವೀಟಿಸಿದ್ದಾರೆ.

‘ವಿಶ್ವ ಹಿಂದೂ ಪರಿಷತ್‌, ‘ವಿಶ್ವ ವಿನಾಶಕ ಪರಿಷತ್‌ʼ ಅಥವಾ ‘ಧರ್ಮ ವಿನಾಶಕ ಪರಿಷತ್‌ʼ ಆಗುವುದು ಬೇಡ. ಬಜರಂಗದಳ ಭಾವನೆಗಳ ಭಯೋತ್ಪಾದಕ ಆಗುವದು ಬೇಡ. ಹಿಂದೂ ಧರ್ಮದ ನಾಶ ಚಕ್ರವರ್ತಿ, ಸಾಮ್ರಾಟರಿಗೇ ಆಗಲಿಲ್ಲ. ಹಿಂದುತ್ವ ಅಂದೂ ಉಳಿದಿತ್ತು, ಮುಂದೆಯೂ ಉಳಿಯುತ್ತದೆ. ನಿಮ್ಮ ಕಿತಾಪತಿ ಏಕೆ?’ ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ.

‘ಕೊರೊನಾ ಕಾಲದಲ್ಲಿ ನೀವೊಬ್ಬರೇ ಜನರ ಸೇವೆ ಮಾಡಿಲ್ಲ. ಎಲ್ಲರೂ ಜಾತಿ, ಧರ್ಮ ಮೀರಿ ಸೇವೆ ಮಾಡಿದ್ದಾರೆ. ‘ಶವ ಸಂಸ್ಕಾರದಲ್ಲೂ ಕೀರ್ತಿʼಯನ್ನು ಹುಡುಕುವ ನಿಮ್ಮಗಳ ವಿಕೃತ ಮನಸ್ಥಿತಿಗೆ ನನ್ನ ಮರುಕವಿದೆ. ಇದಾ ನಿಮ್ಮ ಧರ್ಮ?’ ಎಂದು ಕೇಳಿದ್ದಾರೆ.

‘ಸೋಂಕಿಗೆ ಬಲಿಯಾದವರ ಪಾರ್ಥೀವ ಶರೀರಗಳನ್ನು ನೀವು ಬಾಲಂಗೋಚಿ ಆಗಿರುವ ಪಕ್ಷದ ಸರಕಾರ ಹೇಗೆ ಕಂಡಿತು ಎಂಬುದಕ್ಕೆ ದಿವಂಗತ ಕೇಂದ್ರ ಮಂತ್ರಿ ಶ್ರೀ ಸುರೇಶ ಅಂಗಡಿಯವರೇ ಸಾಕ್ಷಿ. ಅವರ ಅಂತ್ಯಕ್ರಿಯೆ ಹೇಗಾಯಿತು ಎಂದು ಮಾಧ್ಯಮಗಳ ಮೂಲಕ ಕಣ್ಣಾರೆ ನೋಡಿದ್ದೇನೆ’ ಎಂದು ತಿಳಿಸಿದ್ದಾರೆ.

‘ಅಂದು ಕೇಂದ್ರ-ರಾಜ್ಯ ಸರಕಾರಗಳ ವೈಫಲ್ಯಗಳು ಯಾವ ಮಟ್ಟದಲ್ಲಿದ್ದವು? ಬೆಂಗಳೂರಿನಲ್ಲಿ ಯಾರೆಲ್ಲ ಶವ ಸಂಸ್ಕಾರ ಮಾಡಿದರು ಎನ್ನುವುದನ್ನು ನಾವೂ ಮಾಧ್ಯಮಗಳಲ್ಲಿ ಕಂಡಿದ್ದೇವೆ. ಆಗ ಇವರೆಲ್ಲ ಎಲ್ಲಿದ್ದರೋ ನನಗಂತೂ ಗೊತ್ತಿಲ್ಲ’ ಎಂದೂ ಮಾಜಿ ಸಿಎಂ ಟೀಕಿಸಿದ್ದಾರೆ

‘ಡಿಜೆ ಹಳ್ಳಿ ಗಲಭೆ ಕಾರಣದ ಬಗ್ಗೆ ನೀವು ಏಕೆ ದನಿಯೆತ್ತುವುದಿಲ್ಲ? ಠಾಣೆಗೆ ಬೆಂಕಿ ಬಿದ್ದಾಗ ಅದರಲ್ಲಿ ಚಳಿ ಕಾಯಿಸಿಕೊಂಡವರು ನೀವು. ಧರ್ಮದ ಪಾಠ ಮಾಡುವ ನೀವು, ಧರ್ಮಗುರುಗಳಿಗೆ ಗೌರವ ಕೊಡಬೇಕು ಎನ್ನುವುದನ್ನೂ ತಿಳಿದಿರಬೇಕಲ್ಲವೇ? ನೀವು ಬಾಲಂಗೋಚಿ ಆಗಿರುವ ಸರಕಾರದ ಬೇಹುಗಾರಿಕೆ ವಿಭಾಗ ನಿದ್ದೆ ಮಾಡುತ್ತಿತ್ತು, ಏಕೆ?’ ಎಂದು ಕೇಳಿದ್ದಾರೆ.

‘ಧರ್ಮ ರಕ್ಷಣೆ ಎಂದರೆ ಶಿವಮೊಗ್ಗದಲ್ಲಿ ಸಚಿವರೇ 144‌ ಸೆಕ್ಷನ್ ಉಲ್ಲಂಘಿಸುವುದಾ? ಅವರೇ ನಿಂತು ಹಿಂಸೆಗೆ ಪ್ರಚೋದನೆ ಕೊಡುವುದಾ? ನಾವ್ಯಾರೂ ಹೀಗೆ ಮಾಡಿಲ್ಲ. ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕಿ ಎಂದು ನೇರವಾಗಿ ಹೇಳಿದ್ದೇನೆ. ಹಿಜಾಬ್‌ ಗಲಾಟೆ ಹಿಂದಿರುವ ಕಾಣದ ಕೈಗಳಿಗೆ ಕೊಳ ಹಾಕಿ ಎಂದು ಸದನದಲ್ಲೇ ಆಗ್ರಹಿಸಿದ್ದೇನೆ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

‘ಜಗತ್ತಿಗೆ ಶಾಂತಿ ಸಂದೇಶ ಕೊಟ್ಟ ಕುವೆಂಪು ಅವರು ಜನಿಸಿದ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತಿ ಹಬ್ಬ-ಹರಿದಿನದಲ್ಲಿ ನೀವು ಮಾಡುತ್ತಿರುವುದೇನು? ಸೂಕ್ಷ್ಮ ಭಾವನೆಗಳನ್ನು ಕೆರಳಿಸಿ ‘ಅಶಾಂತಿಯ ಅಶ್ವಮೇಧʼ ನಡೆಸುತ್ತಿದ್ದೀರಿ. ಬೆಂಕಿ ಹಾಕುವುದು, ಕಲ್ಲು ಹೊಡೆಯುವುದು ನನ್ನ ಅಥವಾ ನನ್ನ ಪಕ್ಷದ ಸಂಸ್ಕೃತಿ ಅಲ್ಲ’ ಎಂದು ತಿಳಿಸಿದ್ದಾರೆ.

‘ನಿಮಗೆ ದೇಶ, ಸಂವಿಧಾನದ ಮೇಲೆ ಗೌರವ ಇಲ್ಲ. ಜನರೆಂದರೆ ನಿಮ್ಮ ಪಾಲಿಗೆ ‘ಭಾವನೆಗಳ ದಾಳಗಳುʼ ಮಾತ್ರ. ನಿಜವಾದ ಹಿಂದೂ ಎಂದೂ ಸಮಾಜ ಒಡೆಯಲಾರ. ‘ಹಿಂದೂ ಎಂದರೆ ಎಲ್ಲರೂ ಒಂದು’ ಎನ್ನುವ ಆದರ್ಶ ಮತ್ತು ಪರಂಪರಾಗತ ನಂಬಿಕೆ. ಈ ನಂಬಿಕೆಯ ಮೇಲೆಯೇ ಭಾರತ ನಿಂತಿದೆ. ಭಾವನೆಗಳನ್ನು ಹೇರಿ ಭಾರತವನ್ನು ಒಡೆಯಲು ನಿಮ್ಮಿಂದ ಸಾಧ್ಯವಿಲ್ಲ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.