ವಿಧಾನಸೌಧ
ಬೆಂಗಳೂರು: ಕೆರೆಗಳ ಬಫರ್ ಝೋನ್ ಕಡಿಮೆ ಮಾಡಲು ಅವಕಾಶ ಮಾಡಿಕೊಡುವ ‘ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆ’ಯನ್ನು ವಿರೋಧ ಪಕ್ಷಗಳ ಸದಸ್ಯರ ಸಭಾತ್ಯಾಗದ ನಡುವೆಯೇ ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಲಾಯಿತು.
ಸಭಾ ನಾಯಕ ಎನ್.ಎಸ್.ಬೋಸರಾಜು ಅವರು ಮಸೂದೆಯನ್ನು ಮಂಡಿಸಿದರು. ‘ಬೆಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸಣ್ಣ ಜಲಮೂಲಗಳ ಸಂರಕ್ಷಣೆಯ ಜತೆಗೆ ಅಭಿವೃದ್ಧಿ ಚಟುವಟಿಕೆಗಳನ್ನೂ ನಡೆಸಲು ಬಫರ್ ಝೋನ್ ಅನ್ನು ಕಡಿಮೆ ಮಾಡಬೇಕು ಎಂಬ ಒತ್ತಾಯವಿತ್ತು’ ಎಂದರು.
ಬೆಂಗಳೂರು ವ್ಯಾಪ್ತಿಯ ಕೆರೆಗಳ ಬಫರ್ ಝೋನ್ ಕಡಿಮೆ ಮಾಡುವುದಕ್ಕೆ ವಿರೋಧ ಪಕ್ಷಗಳ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ತಿದ್ದುಪಡಿಯಿಂದ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಅನುಕೂಲವಾಗುತ್ತದೆ. ಕೆರೆಗಳು ಹಾಳಾಗುತ್ತವೆ ಎಂದು ಕಳವಳ ವ್ಯಕ್ತಪಡಿಸಿದರು. ಸಚಿವ ಬೋಸರಾಜು ಅವರು ನೀಡಿದ ಉತ್ತರಗಳಿಗೆ ತೃಪ್ತರಾಗದ ಸದಸ್ಯರು, ‘ಬೆಂಗಳೂರಿನ ಕೆರೆಗಳಿಗೆ ಸಂಬಂಧಿಸಿದ ಸೆಕ್ಷನ್ಗಳನ್ನು ವಾಪಸ್ ಪಡೆಯಬೇಕು. ಇಲ್ಲವೇ ಮಸೂದೆಯನ್ನು ಜಂಟಿ ಸದನ ಸಮಿತಿಗೆ ಒಪ್ಪಿಸಬೇಕು’ ಎಂದು ಒತ್ತಾಯಿಸಿದರು.
ಈ ಮಧ್ಯೆಯೇ ಬೋಸರಾಜು ಅವರು ಮಸೂದೆಯನ್ನು ಅಂಗೀಕರಿಸುವಂತೆ ಕೋರಿದರು. ಆಗ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.