ADVERTISEMENT

ಬಿಡದಿ ಭೂ ಸ್ವಾಧೀನ ಪ್ರಶ್ನಿಸಿದ ಅರ್ಜಿ: ಹೈಕೋರ್ಟ್‌ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 30 ಜುಲೈ 2025, 18:47 IST
Last Updated 30 ಜುಲೈ 2025, 18:47 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಬಿಡದಿ ನಗರ ಸಮಗ್ರ ಉಪನಗರ ಯೋಜನೆ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಗ್ರೇಟರ್‌ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಡಿ ರಾಮನಗರ ತಾಲ್ಲೂಕು ಬಿಡದಿ ಹೋಬಳಿಯ ಅರಳಾಳುಸಂದ್ರ ಗ್ರಾಮದ ವಿವಿಧ ಸರ್ವೆ ನಂಬರ್‌ಗಳಲ್ಲಿನ ಭೂ ಸ್ವಾಧೀನ ಪ್ರಕ್ರಿಯೆ ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ-2025ರ ಅಡಿಯಲ್ಲಿನ ಭೂಸ್ವಾಧೀನ ಪ್ರಕ್ರಿಯೆ ಪ್ರಶ್ನಿಸಿ ರಾಜಗೋಪಾಲ ಗೋಪಾಲಕೃಷ್ಣ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರತಿವಾದಿ ಪರ ವಕೀಲರ ಆಕ್ಷೇಪಣೆ ದಾಖಲಿಸಿಕೊಂಡು ವಿಚಾರಣೆ ಮುಂದೂಡಿದೆ.

ಕೋರಿಕೆ ಏನು?: ‘ರಾಜ್ಯ ಸರ್ಕಾರ 11 ಸಾವಿರ ಎಕರೆ ಜಮೀನನ್ನು ಕಾನೂನುಬಾಹಿರವಾಗಿ ಭೂಸ್ವಾಧೀನಕ್ಕೆ ಪಡೆಯಲು ಮುಂದಾಗಿದೆ. ವಿಪರ್ಯಾಸ ಎಂದರೆ, 2025ರ ಮೇ 15ರಂದು ಕಾಯ್ದೆ ಜಾರಿಯಾಗುವ ಮುನ್ನವೇ ಮಾರ್ಚ್ 12ರಂದೇ ಭೂ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸದೇ ಹಾಗೂ ಪರಿಸರ ಇಲಾಖೆ ಅನುಮತಿ ಪಡೆಯದೇ ಕಾನೂನುಬಾಹಿರವಾಗಿ ಸ್ವಾಧೀನಕ್ಕೆ ಮುಂದಾಗಿರುವ ಈ ಪ್ರಕ್ರಿಯೆ ಅಮಾನ್ಯವಾದುದು’ ಎಂದು ಘೋಷಿಸುವಂತೆ ಅರ್ಜಿದಾರರು ಕೋರಿದ್ದಾರೆ. ಅರ್ಜಿದಾರರ ಪರ ವಕೀಲ ಹೈಕೋರ್ಟ್‌ ಸದಾನಂದ್ ಜಿ.ಶಾಸ್ತ್ರಿ ವಕಾಲತ್ತು ವಹಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.