ಬೆಂಗಳೂರು: ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ 2011ರ ಸಾಂವಿಧಾನಿಕ ಸಿಂಧುತ್ವವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ತಕ್ಷಣವೇ ಹೆಚ್ಚುವರಿ ವಿಶೇಷ ನ್ಯಾಯಾಲಯಗಳನ್ನು ತೆರೆಯುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಈ ಸಂಬಂಧ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳನ್ನು ವಿಲೇವಾರಿ ಮಾಡಿದ ನ್ಯಾಯಮೂರ್ತಿ ಅರವಿಂದ ಕುಮಾರ್ ಮತ್ತು ಬಿ.ಎ. ಪಾಟೀಲ ಅವರಿದ್ದ ವಿಭಾಗೀಯ ಪೀಠ, ವಿಶೇಷವಾಗಿ ಎಲ್ಲಾ ಜಿಲ್ಲೆಗಳಲ್ಲೂ ನ್ಯಾಯಾಲಯ ತೆರೆಯುವಂತೆ ತಿಳಿಸಿದೆ.
‘ಬೆಂಗಳೂರು ನಗರದಲ್ಲಿ ಮಾತ್ರ ಭೂಕಬಳಿಕೆ ವಿಶೇಷ ನ್ಯಾಯಾಲಯ ಇದೆ. ಈ ಕಾಯ್ದೆಯಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕೆಂದರೆ ರೈತರು ರಾಜಧಾನಿಗೇ ಬರಬೇಕಾದ ಸ್ಥಿತಿ ಇದೆ. ಇದು ಬಡ ರೈತರಿಗೆ ಕಷ್ಟವಾಗಿದೆ. ಅಲ್ಲದೇ ಈ ಕಾಯ್ದೆಯಡಿ 7,800 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 4,400 ಪ್ರಕರಣಗಳು ವಿಚಾರಣೆ ಬಾಕಿ ಇವೆ. ಹೀಗಾಗಿ ಹೆಚ್ಚುವರಿ ನ್ಯಾಯಾಲಯಗಳನ್ನು ಜಿಲ್ಲಾ ಮಟ್ಟದಲ್ಲಿ ತೆರೆಯುವುದು ಸೂಕ್ತ’ ಎಂದು ಪೀಠ ಅಭಿಪ್ರಾಯಪಟ್ಟಿತು.
ಸಕಾರಣವಿಲ್ಲದೆ ಭೂ ಕಬಳಿಕೆ ವಿಶೇಷ ನ್ಯಾಯಾಲಯಗಳಿಗೆ ಪ್ರಕರಣಗಳನ್ನು ವರ್ಗಾಯಿಸಬಾರದು. ಈ ಆದೇಶವನ್ನು ಗಮನದಲ್ಲಿಟ್ಟುಕೊಂಡು ಪ್ರಕರಣಗಳನ್ನು ಪ್ರತ್ಯೇಕವಾಗಿ ನಿಭಾಯಿಸುವಂತೆ ವಿಶೇಷ ನ್ಯಾಯಾಲಯಕ್ಕೂ ಪೀಠ ನಿರ್ದೇಶನ ನೀಡಿತು.
‘ಈ ಕಾಯ್ದೆಯು ಸಂವಿಧಾನದ 14, 20 ಮತ್ತು 21ನೇ ವಿಧಿಗಳನ್ನು ಉಲ್ಲಂಘಿಸಿದೆ’ ಎಂದು ಆರೋಪಿಸಿ ಹೈಕೋರ್ಟ್ಗೆ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿದ್ದವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.