ADVERTISEMENT

Karnataka Assembly | ಬಗರ್‌ ಹುಕುಂ ಸಮಿತಿ ಅಧ್ಯಕ್ಷ: ಶಾಸಕರಲ್ಲದವರಿಗೂ ಅವಕಾಶ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2024, 14:19 IST
Last Updated 23 ಫೆಬ್ರುವರಿ 2024, 14:19 IST
<div class="paragraphs"><p>ಕೃಷ್ಣ ಬೈರೇಗೌಡ</p></div>

ಕೃಷ್ಣ ಬೈರೇಗೌಡ

   

ಬೆಂಗಳೂರು: ಶಾಸಕ ಸ್ಥಾನ ಖಾಲಿ ಇರುವುದು, ಸಮಯಾಭಾವ ಅಥವಾ ಇತರ ಕಾರಣಗಳಿಂದ ಶಾಸಕರು ನಿರಾಕರಿಸಿದಲ್ಲಿ ಬಗರ್‌ ಹುಕುಂ ಸಮಿತಿ ಅಧ್ಯಕ್ಷರನ್ನಾಗಿ ಬೇರೆ ವ್ಯಕ್ತಿಯನ್ನು ನೇಮಿಸಲು ಅವಕಾಶ ಕಲ್ಪಿಸುವ ‘ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ಮಸೂದೆ–2024’ಕ್ಕೆ ವಿಧಾನಸಭೆ ಶುಕ್ರವಾರ ಅಂಗೀಕಾರ ನೀಡಿತು.

‘ಯಾವುದೇ ವಿಧಾನಸಭಾ ಕ್ಷೇತ್ರದ ಸದಸ್ಯರು ಬಗರ್‌ ಹುಕುಂ ಸಮಿತಿಯಲ್ಲಿರಲು ನಿರಾಕರಿಸಿ ಲಿಖಿತ ರೂಪದಲ್ಲಿ ತಿಳಿಸಿದರೆ ಅಥವಾ ಶಾಸಕ ಸ್ಥಾನ ಖಾಲಿ ಇದ್ದರೆ ಆ ಕ್ಷೇತ್ರದ ಯಾವುದೇ ವ್ಯಕ್ತಿಯನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲು ಈ ತಿದ್ದುಪಡಿಯು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡುತ್ತದೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸದನಕ್ಕೆ ಮಾಹಿತಿ ನೀಡಿದರು.

ADVERTISEMENT

ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಒಂದಕ್ಕಿಂತ ಹೆಚ್ಚು ಸಮಿತಿಗಳನ್ನು ನೇಮಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಯಿಂದ ರಾಜ್ಯ ಸರ್ಕಾರಕ್ಕೆ ನೀಡುವ ತಿದ್ದುಪಡಿಯು ಮಸೂದೆಯಲ್ಲಿದೆ. ಒಂದಕ್ಕಿಂತ ಹೆಚ್ಚು ತಾಲ್ಲೂಕುಗಳಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಹೆಚ್ಚು ಜನಸಂಖ್ಯೆ ಇರುವ ತಾಲ್ಲೂಕುಗಳ ತಹಶೀಲ್ದಾರರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಬೇಕೆಂಬ ತಿದ್ದುಪಡಿಯೂ ಇದೆ.

ಕೇಂದ್ರ ಸರ್ಕಾರದ ವಿರುದ್ಧ ಕೈಗೊಂಡಿರುವ ನಿರ್ಣಯ ವಾಪಸ್‌ ಪಡೆಯಲು ಆಗ್ರಹಿಸಿ ಬಿಜೆಪಿ, ಜೆಡಿಎಸ್‌ ಧರಣಿ ನಡೆಸುತ್ತಿದ್ದ ಸಂದರ್ಭದಲ್ಲೇ ಭೂ ಕಂದಾಯ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಯಿತು. ಗದ್ದಲದ ಮಧ್ಯದಲ್ಲೇ ಮಸೂದೆಗೆ ಅಂಗೀಕಾರ ನೀಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.