ಬೆಂಗಳೂರು: ಕೊರೊನಾ ವೈರಸ್ ಸೋಂಕಿತರ ಚಿತ್ಸೆಯಲ್ಲಿ ತೊಡಗಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ ಮತ್ತು ಹೋಮ್ ಕ್ವಾರಂಟೀನ್ನಲ್ಲಿರುವವರನ್ನು ಮನೆ ಮಾಲೀಕರು ಖಾಲಿ ಮಾಡಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಗುರುವಾರ ಟ್ವೀಟ್ ಮಾಡಿರುವ ಶ್ರೀರಾಮುಲು ಅಂಥವರಿಗೆ ಎಚ್ಚರಿಕೆ ರವಾನಿಸಿದ್ದಾರೆ.
‘ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವವರಮನೆ ಖಾಲಿ ಮಾಡಲು ಮಾಲೀಕರು ಒತ್ತಾಯಿಸುವುದು ಅಮಾನವೀಯ ಮತ್ತು ಗಂಭೀರ ಸ್ವರೂಪದ ಅಪರಾಧ,’ ಎಂದು ಅವರು ಹೇಳಿದ್ದಾರೆ.
ಇದೇ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು, ಪಾಲಿಕೆ ಆಯುಕ್ತರು, ಪೊಲೀಸ್ ಇಲಾಖೆಗೆ ಪತ್ರ ಬರೆದಿದ್ದಾರೆ.
‘ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರು, ಪ್ಯಾರಾಮೆಡಿಕಲ್ ಸಿಬ್ಬಂದಿ, ಆರೋಗ್ಯ ಇಲಾಖೆ ನೌಕರರನ್ನು ಕರ್ನಾಟಕದಲ್ಲಿ ಮನೆ ಮಾಲೀಕರು ಖಾಲಿ ಮಾಡುವಂತೆ ಒತ್ತಾಯಿಸುತ್ತಿರುವ ಹತ್ತಾರು ದೂರುಗಳು ನಮಗೆ ಬಂದಿವೆ. ಇದು ಸಾರ್ವಜನಿಕ ಸೇವೆಯಲ್ಲಿರುವ ಕರ್ತವ್ಯಕ್ಕೆ ಅಡ್ಡಪಡಿಸಿದಂತೆ. ಕೊರೊನಾ ವೈರಸ್ ತಡೆಯಲು ರಾಜ್ಯದಲ್ಲಿ ಸಾಂಕ್ರಾಮಿಕ ಕಾಯಿಲೆ ನಿಯಂತ್ರಣಾ ಕಾಯ್ದೆ, ಸೋಂಕು ರೋಗಗಳ ಕಾಯ್ದೆ ಜಾರಿಯಲ್ಲಿದೆ. ಮನೆ ಖಾಲಿ ಮಾಡಿಸುವ ದೂರು ಕೇಳಿ ಬಂದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು,’ ಎಂದು ಜಿಲ್ಲಾಧಿಕಾರಿಗಳು, ಬಿಬಿಎಂಪಿ ಆಯುಕ್ತರು, ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.
ಅಲ್ಲದೆ, ಕೈಗೊಂಡ ಕ್ರಮಗಳ ಬಗ್ಗೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಿಂದ ನಿತ್ಯ ವರದಿ ಪಡೆಯಲಾಗುವುದು ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.