ಬೆಂಗಳೂರು: ‘ಕೊರೊನಾ ಎರಡನೇ ಅಲೆ ಶುರುವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಪರೀಕ್ಷೆಗಳನ್ನು ನಡೆಸುವುದು ಸೂಕ್ತವಲ್ಲ. ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಕಾನೂನು ವಿಶ್ವವಿದ್ಯಾಲಯವು ಇದೇ 26ರಿಂದ ನಡೆಸಲು ನಿರ್ಧರಿಸಿರುವ ಪರೀಕ್ಷೆಗಳನ್ನು ಮುಂದೂಡಬೇಕು’ ಎಂದು ಅಖಿಲ ಕರ್ನಾಟಕ ಸ್ನಾತಕೋತ್ತರ ಪದವೀಧರ ವೇದಿಕೆಯ ಕಾರ್ಯಾಧ್ಯಕ್ಷೆ ಬಿ.ಎನ್.ದಿವ್ಯ ಆಗ್ರಹಿಸಿದ್ದಾರೆ.
‘ಕರ್ನಾಟಕದಲ್ಲಿರುವ ಕಾನೂನು ಕಾಲೇಜುಗಳಲ್ಲಿ ತಮಿಳುನಾಡು, ಕೇರಳ ಹಾಗೂ ಇನ್ನಿತರ ರಾಜ್ಯಗಳ ವಿದ್ಯಾರ್ಥಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಪರೀಕ್ಷೆಯ ವೇಳೆ ತಮ್ಮ ಊರುಗಳಿಂದ ನಗರಕ್ಕೆ ಬರುತ್ತಾರೆ. ಹೋಟೆಲ್ ಹಾಗೂ ಲಾಡ್ಜ್ಗಳಲ್ಲಿ ವಾಸವಿರುತ್ತಾರೆ. ಇವರು ಪರೀಕ್ಷೆಗೆ ಹಾಜರಾದರೆ ಎಲ್ಲಿ ಕೊರೊನಾ ಹರಡುವುದೊ ಎಂಬ ಭಯ ಎಲ್ಲರಲ್ಲೂ ಆವರಿಸಿದೆ. ಕಾನೂನು ಕಾಲೇಜಿನ ಸಿಬ್ಬಂದಿ ಕೂಡ ಆತಂಕದಲ್ಲೇ ಪರೀಕ್ಷೆಗಳನ್ನು ನಡೆಸುವ ಅನಿವಾರ್ಯತೆಗೆ ಸಿಲುಕಿದ್ದಾರೆ’ ಎಂದು ಅವರು ಹೇಳಿದ್ದಾರೆ.
‘ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೋವಿಡ್ ಪರೀಕ್ಷಾ ಪ್ರಮಾಣ ಪತ್ರ ತರುವುದನ್ನು ಕಡ್ಡಾಯಗೊಳಿಸಿಲ್ಲ. ಜೊತೆಗೆ ವಿಶ್ವವಿದ್ಯಾಲಯವು ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಲ್ಲೂ ವಿಫಲವಾಗಿದೆ. ಇಷ್ಟೆಲ್ಲಾ ಅವಾಂತರಗಳ ನಡುವೆಯೇ ಪರೀಕ್ಷೆ ನಡೆಸುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.