ಬೆಂಗಳೂರು: 'ವಿದ್ಯಾರ್ಥಿಗಳನ್ನು ಅವಜ್ಞೆ ಮಾಡದೇ ಮತ್ತು ಶಾಲಾ ಕಾಲೇಜಿಗೆ ಹೋಗಿ ಬರಲು ತೊಂದರೆ ಆಗದಂತೆ ಸಹಾನುಭೂತಿಯಿಂದ ವರ್ತಿಸುವಂತೆ ಚಾಲಕ, ನಿರ್ವಾಹಕರಿಗೆ ನಿರ್ದೇಶನ ನೀಡಬೇಕು' ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪತ್ರ ಬರೆದು ಮನವಿ ಮಾಡಿದ್ದಾರೆ.
'ರಾಜ್ಯದ ವಿವಿಧೆಡೆ ಗ್ರಾಮಾಂತರ ಪ್ರದೇಶಗಳ ಅನೇಕ ವಿದ್ಯಾರ್ಥಿಗಳು ಶಾಲಾಕಾಲೇಜಿಗೆ ಹೊರಟಾಗ ಬಸ್ ನಿಲ್ದಾಣಗಳಲ್ಲಿ ಬಸ್ ಗಳನ್ನು ನಿಲ್ಲಿಸದೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸುಗಳ ಕೆಲವು ಚಾಲಕರು, ನಿರ್ವಾಹಕರು ವಿದ್ಯಾರ್ಥಿಗಳ ಬಗ್ಗೆ ಅವಜ್ಞೆ ತೋರುತ್ತಿರುವುದು ಕಂಡುಬರುತ್ತಿದೆ' ಎಂದೂ ಪತ್ರದಲ್ಲಿ ಸಚಿವರು ಉಲ್ಲೇಖಿಸಿದ್ದಾರೆ.
'ನಾನು ಕಳೆದ ಶನಿವಾರ ತುಮಕೂರು ಜಿಲ್ಲೆಯ ಪ್ರವಾಸದಲ್ಲಿರುವಾಗ ಪಿನಗಾನಹಳ್ಳಿ ಮಾರ್ಗದ ಬಸ್ ವೊಂದುನಿಲುಗಡೆ ಕಡ್ಡಾಯವಾಗಿದ್ದರೂ ಬಸ್ ನಿಲ್ಲದಿದ್ದಾಗ ವಿದ್ಯಾರ್ಥಿಗಳು ತೊಂದರೆ ಅನುಭವಿಸಿದ್ದನ್ನು ಗಮನಿಸಿದ್ದೇನೆ. ಬಸ್ ನಿಲ್ಲಿಸದಿದ್ದರೆ ಮಕ್ಕಳಿಗೆ ಆಗುವ ತೊಂದರೆ ಕುರಿತು ಆ ಬಸ್ ಚಾಲಕ ಮತ್ತು ನಿರ್ವಾಹಕರಿಗೆ ಮನದಟ್ಟು ಮಾಡಿದ್ದೇನೆ' ಎಂದೂ ಪತ್ರದಲ್ಲಿ ಬರೆದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.