ನವದೆಹಲಿ: ರಾಜ್ಯ ವಿಧಾನ ಪರಿಷತ್ಗೆ ಇದೇ 29ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಮಾಜಿ ಸಚಿವರಾದ ಎಂಟಿಬಿ ನಾಗರಾಜ್ ಹಾಗೂ ಆರ್.ಶಂಕರ್ ಅವರಿಗೆ ಟಿಕೆಟ್ ನೀಡಿದೆ.
ಆದರೆ, ಜೆಡಿಎಸ್ ತೊರೆದು ಬಿಜೆಪಿ ಸೇರಿ ಹುಣಸೂರಿನಲ್ಲಿ ನಡೆದಿದ್ದ ಉಪಚುನಾವಣೆಯಲ್ಲಿ ಸೋತಿದ್ದ ಮಾಜಿ ಸಚಿವ ಎಚ್.ವಿಶ್ವನಾಥ್ ಅವರನ್ನು ಪರಿಷತ್ ಚುನಾವಣೆಗೆ ಪಕ್ಷ ಪರಿಗಣಿಸಿಲ್ಲ. ಕಲಬುರ್ಗಿಯ ಸುನಿಲ್ ವಲ್ಯಾಪುರೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಾಪಸಿಂಹ ನಾಯಕ್ ಅವರು ಟಿಕೆಟ್ ಪಡೆದುಕೊಂಡಿರುವ ಇತರ ಅಭ್ಯರ್ಥಿಗಳಾಗಿದ್ದಾರೆ. ನಾಮ ಪತ್ರ ಸಲ್ಲಿಕೆಗೆ ಗುರುವಾರ ಕಡೆಯ ದಿನವಾಗಿದ್ದು, ಕೊನೆಯ ಹಂತದಲ್ಲಿ ಟಿಕೆಟ್ ಘೋಷಿಸಲಾಗಿದೆ.
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಎಂಟಿಬಿ ನಾಗರಾಜ್ ಉಪ ಚುನಾವಣೆಯಲ್ಲಿ ಸೋತಿದ್ದರೂ, ಪರಿಷತ್ಗೆ ಟಿಕೆಟ್ ನೀಡಲಾಗಿದೆ.
ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದ ಆರ್.ಶಂಕರ್ಗೂ ಟಿಕೆಟ್ ದೊರೆತಿದೆ.
ಚಿಂಚೋಳಿಯಿಂದ ಎರಡು ಬಾರಿ ವಿಧಾನಸಭೆ ಸದಸ್ಯರಾಗಿ, ಸಚಿವರಾಗಿದ್ದ ಸುನಿಲ್ ವಲ್ಯಾಪುರೆ ಅವರಿಗೆ ಪರಿಷತ್ ಪ್ರವೇಶಕ್ಕೆ ಅವಕಾಶ ದೊರೆತಿದೆ.
ಮಾಜಿ ಸಚಿವ ಚನ್ನಪಟ್ಟಣದ ಸಿ.ಪಿ ಯೋಗೇಶ್ವರ್ ಅವರೂ ವಿಧಾನಪರಿಷತ್ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.