ಬೆಂಗಳೂರು: ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಬಿ.ಆರ್ ಅನಿಲ್ ಕುಮಾರ್ ಕಣದಿಂದ ಹಿಂದೆ ಸರಿದಿದ್ದಾರೆ.
ನಾಮಪತ್ರ ಹಿಂಪಡೆಯಲು ನಿಗದಿಯಾಗಿದ್ದ ಸಮಯ ಕೊನೆಗೊಂಡಿರುವುದರಿಂದ ಸೋಮವಾರ ಔಪಚಾರಿಕ ಚುನಾವಣೆ ನಡೆಯಲಿದ್ದು, ಬಿಜೆಪಿಯ ಲಕ್ಷ್ಮಣ ಸವದಿ ಅವರು ಗೆಲುವು ಸಾಧಿಸುವುದು ನಿಚ್ಚಳವಾಗಿದೆ.
ಚುನಾವಣೆಯಿಂದ ಹಿಂದೆ ಸರಿಯುತ್ತಿರುವ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅನಿಲ್ ಕುಮಾರ್, ನಾನು ಚುನಾವಣೆಯಿಂದ ನಿವೃತ್ತನಾಗುತ್ತಿದ್ದೇನೆ. ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರು ನನಗೆ ಬೆಂಬಲ ನೀಡಿದ್ದರು. ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದರು.
‘ನನ್ನನ್ನು ಯಾರೂ ಬೆದರಿಸುತ್ತಿಲ್ಲ. ನನ್ನ ಧಾರ್ಮಿಕ ಗುರುಗಳ ಆದೇಶದಂತೆ ನಾನು ಹಿಂದೆಸರಿಯುತ್ತಿದ್ದೇನೆ ಅಷ್ಟೇ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಕ್ಕೆ ನನ್ನಿಂದ ಮುಜುಗರವಾಗಬಾರದು ’ ಎಂದು ತಿಳಿಸಿದರು.
ರಿಜ್ವಾನ್ ಅರ್ಷದ್ ಅವರು ಶಿವಾಜಿನಗರ ವಿಧಾನಸಭೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತಮ್ಮ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರಿಂದ ತೆರವಾಗಿದ್ದ ಒಂದು ಸ್ಥಾನಕ್ಕೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ನಾಮಪತ್ರ ಸಲ್ಲಿಸಿದ್ದರು. ಅವರು ಅವಿರೋಧ ಆಯ್ಕೆಯಾಗಲಿದ್ದಾರೆ ಎನ್ನುವಾಗಲೇ ಜೆಡಿಎಸ್, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಅನಿಲ್ ಕುಮಾರ್ ನಾಮಪತ್ರ ಸಲ್ಲಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.