ದಾವಣಗೆರೆ: ‘ಸಿದ್ದರಾಮಯ್ಯ ಅವರು ಜಿಂದಾಲ್ ಪ್ರಕೃತಿ ಚಿಕಿತ್ಸಾಲಯಕ್ಕೆ ಚಿಕಿತ್ಸೆಗೆ ಹೋಗುತ್ತಿದ್ದಾರೆ ಎಂಬ ಮಾಹಿತಿ ಇದೆ. ಅಲ್ಲಿಗೆ ಹೋಗಿ ಬಂದ ಬಳಿಕವಾದರೂ ಸರಿಯಾಗಿ ಮಾತನಾಡಲಿ’ ಎಂದು ವಸತಿ ಸಚಿವ ವಿ.ಸೋಮಣ್ಣ ವ್ಯಂಗ್ಯವಾಡಿದ್ದಾರೆ.
‘ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದವರು. ಐದು ವರ್ಷ ಆಡಳಿತ ನಡೆಸಿದವರು. ಎಲ್ಲಾ ವಿಚಾರವೂ ಅವರಿಗೆ ಗೊತ್ತಿದೆ. ಎಲ್ಲೋ ಕುಳಿತು ಏನೋ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಟೇಕಾಫ್ ಆಗಿದೆ. ಇದರಲ್ಲಿ ಎರಡು ಮಾತಿಲ್ಲ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
‘ಕೋವಿಡ್ ಪಿಡುಗು, ಪ್ರವಾಹ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತಿದೆ. ಬೊಮ್ಮಾಯಿ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇಂಥ ವೇಳೆಯಲ್ಲಿ ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಜನಪರ ಕೆಲಸ ಮಾಡಿದ್ದಾರೆ. ಬೊಮ್ಮಾಯಿ ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ನಮ್ಮ ಕೆಲಸ ನಾವು ಮಾಡ್ತೇವೆ. ಉಳಿದಿದ್ದು ಜನರು ತೀರ್ಮಾನ ಮಾಡುತ್ತಾರೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.