ADVERTISEMENT

ಲಿಂಗಾಯತ ಪ್ರತ್ಯೇಕ ಧರ್ಮ ಶಿಫಾರಸು ತಿರಸ್ಕೃತ: ಕೇಂದ್ರದ ವಿರುದ್ಧ ಪ್ರತಿಭಟನೆ

ಲಿಂಗಾಯತ‌ ಸಮಾವೇಶದಲ್ಲಿ ಖಂಡನಾ ನಿರ್ಣಯ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2018, 8:28 IST
Last Updated 10 ಡಿಸೆಂಬರ್ 2018, 8:28 IST
ಲಿಂಗಾಯತ ಧರ್ಮ ಮಹಾಸಭೆ ಅಧ್ಯಕ್ಷೆ ಮಾತೆ ಮಹಾದೇವಿ ಸೇರಿದಂತೆ ಸ್ವಾಮೀಜಿಗಳಿಂದ ಕೇಂದ್ರದ ನಿರ್ಧಾರದ ವಿರುದ್ಧ ಖಂಡನಾ ನಿರ್ಣಯ
ಲಿಂಗಾಯತ ಧರ್ಮ ಮಹಾಸಭೆ ಅಧ್ಯಕ್ಷೆ ಮಾತೆ ಮಹಾದೇವಿ ಸೇರಿದಂತೆ ಸ್ವಾಮೀಜಿಗಳಿಂದ ಕೇಂದ್ರದ ನಿರ್ಧಾರದ ವಿರುದ್ಧ ಖಂಡನಾ ನಿರ್ಣಯ   

ನವದೆಹಲಿ: ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾನಮಾನದ ಶಿಫಾರಸನ್ನು ತಿರಸ್ಕರಿಸಿದ್ದಾಗಿ ಕರ್ನಾಟಕ ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದ್ದು, ಇದರ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಲಿಂಗಾಯತ ಧರ್ಮ ಮಹಾಸಭೆ ಅಧ್ಯಕ್ಷೆ ಮಾತೆ ಮಹಾದೇವಿ ಹೇಳಿದರು.

ಇಲ್ಲಿನ ತಾಲ್ಕಟೋರಾ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಆರಂಭವಾದ ಲಿಂಗಾಯತ‌ ಸಮಾವೇಶದ ಉದ್ಘಾಟನೆ‌ ಸಮಾರಂಭದಲ್ಲಿ ಅವರು ಮಾತನಾಡಿದರು.

ADVERTISEMENT

ರಾಜ್ಯ ಸರ್ಕಾರ ಕಳೆದ ‌ವರ್ಷ ಪ್ರತ್ಯೇಕ ಧರ್ಮದ ಶಿಫಾರಸು ಮಾಡಿದೆ. ಆದರೆ, ಕೇಂದ್ರ ಸರ್ಕಾರವು ಅದನ್ನು ತಿರಸ್ಕರಿಸಿದ್ದಾಗಿ ನವೆಂಬರ್ 13ರಂದು ರಾಜ್ಯ ಹೈಕೋರ್ಟ್‌ಗೆ ಹೇಳಿಕೆ ಸಲ್ಲಿಸಿದೆ. ಮೂರು ದಿನ ನಡೆಯಲಿರುವ ಈ ಸಮಾವೇಶವು ಪ್ರತಿಭಟನಾ ಸಮಾವೇಶ ಆಗಲಿದೆ ಎಂದು ಅವರು ತಿಳಿಸಿದರು.

ಸಿಖ್, ಜೈನ ಮಾತ್ರವಲ್ಲದೆ ವಿದೇಶದ ಧರ್ಮಗಳಾದ ಇಸ್ಲಾಂ, ಕ್ರೈಸ್ತ ಹಾಗೂ ಫಾರಸಿಗಳಿಗೆ ಪ್ರತ್ಯೇಕ ಸ್ಥಾನಮಾನ ನೀಡಿ ಧಾರ್ಮಿಕ ಅಲ್ಪಸಂಖ್ಯಾತ ಎಂದು ಗುರುತಿಸಿರುವ ಕೇಂದ್ರ ಲಿಂಗಾಯತದ ಮನವಿ ತಿರಸ್ಕರಿಸಿದ್ದು ಸರಿಯಲ್ಲ ಎಂದು ಅವರು ಹೇಳಿದರು.

ವಿವಿಧ ಮಠಾಧೀಶರು, ಕರ್ನಾಟಕ ಹಾಗೂ ಮಹಾರಾಷ್ಟ್ರದ ಲಿಂಗಾಯತ ಸಮುದಾಯದ ನೂರಾರು ಜನರು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.

ಸಮಾವೇಶಕ್ಕೆ ರಾಜಕಾರಣಿಗಳು ಗೈರು: ಸಮಾವೇಶದ ಉದ್ಘಾಟನೆಗೆ ಕೇಂದ್ರದ ಸಚಿವ ಡಿ.ವಿ. ಸದಾನಂದಗೌಡ ಗೈರಾದರು. ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಸೈಯದ್ ಘಯೋರಲ್ ಹಸನ್‌ ರಿಜ್ವಿ ಅವರು ಧ್ವಜಾರೋಹಣ ನೆರವೇರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.