ADVERTISEMENT

ಲಿಂಗಾಯತ ಮಹಿಳಾ ಸಮಾವೇಶ: ಐದು ನಿರ್ಣಯಗಳ ಅಂಗೀಕಾರ

​ಪ್ರಜಾವಾಣಿ ವಾರ್ತೆ
Published 28 ಜನವರಿ 2024, 15:19 IST
Last Updated 28 ಜನವರಿ 2024, 15:19 IST
   

ಅಕ್ಕಮಹಾದೇವಿ ವೇದಿಕೆ(ಬೆಳಗಾವಿ): ‘ನ್ಯಾಯಮೂರ್ತಿ ನಾಗಮೋಹನದಾಸ್‌ ವರದಿ ಜಾರಿಗೆ ರಾಜ್ಯ ಸರ್ಕಾರವು ಕೇಂದ್ರಕ್ಕೆ ಶಿಫಾರಸು ಮಾಡಿದ್ದು, ಇದಕ್ಕೆ ಕೇಂದ್ರವು ಕೇಳಿರುವ ಮಾಹಿತಿ ಒದಗಿಸಿ ವರದಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು’ ಎನ್ನುವುದು ಸೇರಿದಂತೆ ಐದು ನಿರ್ಣ‌ಯಗಳನ್ನು ಇಲ್ಲಿ ಭಾನುವಾರ ಮುಕ್ತಾಯಗೊಂಡ ರಾಷ್ಟ್ರೀಯ ಲಿಂಗಾಯತ ಪ್ರಥಮ ಮಹಿಳಾ ಸಮಾವೇಶದಲ್ಲಿ ಕೈಗೊಳ್ಳಲಾಯಿತು.

‘ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿರುವ ಬಸವಣ್ಣನ ಸಹೋದರಿ ಅಕ್ಕನಾಗಮ್ಮ ತಾಯಿಯ ಲಿಂಗೈಕ್ಯ ಸ್ಥಳ, ಆ ಪ್ರದೇಶದಲ್ಲಿರುವ ಶರಣ ನುಲಿಯ ಚಂದಯ್ಯನವರು ಮತ್ತು ಕಾಯಕ ವರ್ಗದ ಇತರೆ ಶರಣರ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಬೇಕು. ಚನ್ನಬಸವೇಶ್ವರರ ಲಿಂಗೈಕ್ಯ ಸ್ಥಳವಾದ ಉತ್ತರ ಕನ್ನಡ ಜಿಲ್ಲೆಯ ಉಳವಿ ಕ್ಷೇತ್ರದ ಅಭಿವೃದ್ಧಿಗಾಗಿ ಉಳವಿ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು’ ಎಂದು ಒತ್ತಾಯಿಸಲಾಯಿತು.

‘ರಾಜ್ಯದ ಎಲ್ಲ ಜಿಲ್ಲೆಗಳು ಹಾಗೂ ಹೊರರಾಜ್ಯಗಳಲ್ಲಿ ಜಾಗತಿಕ ಲಿಂಗಾಯತ ಮಹಾಸಭೆಯ ಮಹಿಳಾ ಘಟಕಗಳನ್ನು ಆರಂಭಿಸಬೇಕು’ ಎಂದೂ ತೀರ್ಮಾನಿಸಲಾಯಿತು.

ADVERTISEMENT

ಸಮಾವೇಶದ ಸರ್ವಾಧ್ಯಕ್ಷೆ, ಕೂಡಲಸಂಗಮದ ಬಸವ ಧರ್ಮ ಪೀಠದ ಅಧ್ಯಕ್ಷೆ ಮಾತೆ ಗಂಗಾದೇವಿ, ‘ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ಪಡೆಯುವುದೊಂದೇ ನಮ್ಮ ಗುರಿ’ ಎಂದರು. ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಭಾಲ್ಕಿಯ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದ್ದೇವರು, ನಾಗನೂರು ರುದ್ರಾಕ್ಷಿಮಠದ ಅಲ್ಲಮಪ್ರಭು ಸ್ವಾಮೀಜಿ, ಜಾಗತಿಕ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಸ್‌.ಎಂ.ಜಾಮದಾರ ಪಾಲ್ಗೊಂಡಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.