ಬೆಂಗಳೂರು: ವೀರಶೈವ, ಲಿಂಗಾಯತ ಸಮುದಾಯದವರ ಅಭಿವೃದ್ಧಿಗೆ ‘ವೀರಶೈವ– ಲಿಂಗಾಯತ ಅಭಿವೃದ್ಧಿ ನಿಗಮ’ ಸ್ಥಾಪಿಸುವಂತೆ ಸಮುದಾಯದ ಕಾಂಗ್ರೆಸ್ ಶಾಸಕರು ಒತ್ತಾಯಿಸಿದ್ದಾರೆ.
ಬುಧವಾರ ರಾತ್ರಿ ನಡೆದ ಕಾಂಗ್ರೆಸ್ನ ಲಿಂಗಾಯತ ಸಮುದಾಯದ ಶಾಸಕರು, ಮುಖಂಡರ ಸಭೆಯಲ್ಲಿ ಈ ಬಗ್ಗೆ ಸಮಗ್ರವಾಗಿ ಚರ್ಚಿಸಲಾಗಿದೆ.
ಗುರುವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಮಾಡಿ ಬೇಡಿಕೆ ಸಲ್ಲಿಸಲಿದ್ದಾರೆ.
ಲಿಂಗಾಯತ ಪ್ರತ್ಯೇಕ ಧರ್ಮ ರಚನೆಯ ವಿಚಾರ ಈ ಸಂದರ್ಭದಲ್ಲಿ ಅಪ್ರಸ್ತುತ. ಧರ್ಮ ರಚನೆ ವಿವಾದ ಮುಗಿದ ಅಧ್ಯಾಯ. ಧರ್ಮದ ವಿಚಾರಕ್ಕೆ ಗಮನ ಕೊಡುವ ಬದಲು ಸಮುದಾಯದ ಪ್ರಗತಿ ಬಗ್ಗೆ ಚಿಂತಿಸಲು ಮುಖಂಡರು ಸಲಹೆ ಮಾಡಿದ್ದಾರೆ. ಈ ನಿಟ್ಟಿನಲ್ಲೇ ಸಭೆಯಲ್ಲಿ ಚರ್ಚೆಗಳು ನಡೆದವು ಎಂದು ಮೂಲಗಳು ತಿಳಿಸಿವೆ.
‘ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಸಮುದಾಯಕ್ಕೆ ಪ್ರತ್ಯೇಕ ನಿಗಮ ಸ್ಥಾಪಿಸುವಂತೆ ಒತ್ತಾಯಿಸ ಲಾಗುವುದು. ಲಿಂಗಾಯತ– ವೀರಶೈವರನ್ನು ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಪಟ್ಟಿಗೆ (ಒಬಿಸಿ) ಸೇರಿಸುವಂತೆ ಕೇಂದ್ರದ ಮೇಲೂ ಒತ್ತಡ ಹಾಕಲಾಗುವುದು’ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.
ಸಮುದಾಯದ ಯುವಜನರು, ಮುಖಂಡರ ಬೇಡಿಕೆಗಳ ಬಗ್ಗೆ ಚರ್ಚಿಸಲಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಆರ್ಥಿಕವಾಗಿ, ಶೈಕ್ಷಣಿಕವಾಗಿ ಬಲಿಷ್ಠ ರಾಗಬೇಕಿದೆ. ಸಮುದಾಯದವರ ಪ್ರಗತಿ ಬಗ್ಗೆ ಚಿಂತನ ಮಂಥನ ನಡೆಸಲಾಯಿತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತಿಳಿಸಿದರು. ಗೃಹ ಸಚಿವ ಎಂ.ಬಿ.ಪಾಟೀಲ ಸಹ ಸಮಾಜದ ಅಭಿವೃದ್ಧಿಗೆ ಸಲಹೆಗಳನ್ನು ನೀಡಿದ್ದಾರೆ. ಕಾಂಗ್ರೆಸ್ನ ಲಿಂಗಾಯತ ಸಮುದಾಯದ ಬಹುತೇಕ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.