ADVERTISEMENT

ಪಂಚಮಸಾಲಿ ಮೀಸಲಾತಿಗಾಗಿ ಜ.14ರಿಂದ ಪಾದಯಾತ್ರೆ

5 ಲಕ್ಷ ಜನ ಸೇರುವ ನಿರೀಕ್ಷೆ

​ಪ್ರಜಾವಾಣಿ ವಾರ್ತೆ
Published 8 ಜನವರಿ 2021, 20:35 IST
Last Updated 8 ಜನವರಿ 2021, 20:35 IST
ಬಸವಜಯ ಮೃತ್ಯುಂಜಯ ಸ್ವಾಮೀಜಿ
ಬಸವಜಯ ಮೃತ್ಯುಂಜಯ ಸ್ವಾಮೀಜಿ   

ಬೆಂಗಳೂರು: ‘ಪಂಚಮಸಾಲಿ ಸಮಾಜಕ್ಕೆ 2ಎ ಹಾಗೂ ಲಿಂಗಾಯತ ಸಮುದಾಯಕ್ಕೆ ಕೇಂದ್ರದ ಒಬಿಸಿ ಮೀಸಲಾತಿಗೆ ಒತ್ತಾಯಿಸಿ ಕೂಡಲಸಂಗಮದಿಂದ ಬೆಂಗಳೂರಿನವರೆಗೆ ಜ.14ರಿಂದ ಪಾದಯಾತ್ರೆ ನಡೆಸಲಾಗುವುದು’ ಎಂದು ಕೂಡಲಸಂಗಮ ಲಿ‌ಂಗಾಯತ ಪಂಚಮಸಾಲಿ ಮಹಾಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

‘700 ಕಿ.ಮೀ.ವರೆಗಿನ ಈ ಪಾದಯಾತ್ರೆ ಒಂದು ತಿಂಗಳು ನಡೆಯಲಿದೆ. ಕೂಡಲಸಂಗಮದಿಂದ ಕೊಪ್ಪಳ, ದಾವಣಗೆರೆ, ಚಿತ್ರದುರ್ಗ, ತುಮಕೂರು ಮಾರ್ಗವಾಗಿ ಸಾಗುವ ಪಾದಯಾತ್ರೆಯ ಕೊನೆಯ ದಿನ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಈ ಸಂದರ್ಭದಲ್ಲಿ ಕನಿಷ್ಠ ಐದು ಲಕ್ಷ ಜನ ಸೇರಲಿದ್ದಾರೆ' ಎಂದು ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಅಕ್ಟೋಬರ್‌ನಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾಗ ಮುಖ್ಯಮಂತ್ರಿ ಯಡಿಯೂರಪ್ಪನವರೇ ಕರೆ ಮಾಡಿ ಸತ್ಯಾಗ್ರಹ ಕೈಬಿಡುವಂತೆ ಮನವಿ ಮಾಡಿದ್ದರು. ನ.28ರೊಳಗೆ ಬೇಡಿಕೆಗೆ ಸ್ಪಂದಿಸಬೇಕು ಎಂದು ಗಡುವು ನೀಡಲಾಗಿತ್ತು. ತಪ್ಪಿದರೆ ಪಾದಯಾತ್ರೆ ನಡೆಸಲಾಗುವುದು ಎಂದೂ ಹೇಳಿದ್ದೆವು’ ಎಂದು ಅವರು ಹೇಳಿದರು.

ADVERTISEMENT

‘ನಮ್ಮ ಸಮಾಜದವರೇ ಮುಖ್ಯಮಂತ್ರಿಯಾಗಿದ್ದಾರೆ. ಈ ಸಂದರ್ಭದಲ್ಲಿಯೇ ನಮ್ಮ ಬೇಡಿಕೆ ಈಡೇರಬೇಕು. ನಾವೇನು ರಾಜಕೀಯ ಮೀಸಲಾತಿ ಕೇಳುತ್ತಿಲ್ಲ. ಸಮಾಜದ ಮಕ್ಕಳ ಭವಿಷ್ಯಕ್ಕಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕೋರುತ್ತಿದ್ದೇವೆ’ ಎಂದರು.

ನಿಯೋಗ ಭೇಟಿ: ‘ಸರ್ಕಾರದ ನಿಯೋಗ ಶನಿವಾರ (ಜ.9) ಕೂಡಲಸಂಗಮಕ್ಕೆ ಭೇಟಿ ನೀಡಲಿದೆ. ಈ ವೇಳೆ ಸರ್ಕಾರದಿಂದ ಖಚಿತ ಭರವಸೆ ದೊರೆಯುವ ವಿಶ್ವಾಸವಿದೆ. ಮಹತ್ವದ ಸಭೆಯೂ ನಡೆಯಲಿದೆ. ಸಭೆ ಸಮಾಧಾನ ತರದಿದ್ದರೆ ಪಾದಯಾತ್ರೆ ನಡೆಸುವುದು ನಿಶ್ಚಿತ' ಎಂದು ಹೇಳಿದರು.

ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಘಟಕದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಮತ್ತು ಇತರೆ ಪದಾಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.