ಬೆಂಗಳೂರು: ‘ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಪ್ರಾರಂಭಿಸಬೇಕು’ ಎಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಯುಕ್ತ ಸಂಘರ್ಷ ಸಮಿತಿ ಒತ್ತಾಯಿಸಿದೆ.
ಈ ಕುರಿತು ಸರ್ಕಾರದ ಗಮನ ಸೆಳೆಯುವ ಸಲುವಾಗಿ ಸಮಿತಿಯು ಇದೇ 30ರಂದು ನಗರದಲ್ಲಿಪ್ರತಿಭಟನೆ ಹಮ್ಮಿಕೊಂಡಿದೆ.
ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಎಐಟಿಯುಸಿ ರಾಜ್ಯ ಘಟಕದ ಅಧ್ಯಕ್ಷ ಶಿವಣ್ಣ, ‘ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸಲು ಮೂರೂವರೆ ವರ್ಷ ಮೇಲ್ಪಟ್ಟ ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಾಲೆಗಳನ್ನು (ಎಲ್ಕೆಜಿ, ಯುಕೆಜಿ) ಆರಂಭಿಸಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ತಜ್ಞರು, ಸಂಘಟನೆಗಳೊಂದಿಗೆ ಚರ್ಚೆ ಮಾಡದೇ ಸರ್ಕಾರ ಏಕಮುಖವಾಗಿ ಸುತ್ತೋಲೆ ಹೊರಡಿಸಿದೆ’ ಎಂದು ದೂರಿದರು.
ಸಮಿತಿಯ ಬೇಡಿಕೆಗಳು
* ಮಾತೃಪೂರ್ಣ ಯೋಜನೆಯ ಕೆಲಸಕ್ಕೆ ಒಬ್ಬ ಹೆಚ್ಚುವರಿ ಸಹಾಯಕಿಯನ್ನು ನೇಮಿಸಬೇಕು.
* ಖಾಸಗಿ ಕಾನ್ವೆಂಟ್ ಮತ್ತು ಶಾಲೆಗಳಿಗೆ ಹೊಸತಾಗಿ ಅನುಮತಿ ಕೊಡಬಾರದು.
* ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ಮತ್ತು ಪಠ್ಯ ಪುಸ್ತಕಗಳನ್ನು ನೀಡಬೇಕು.
* ಪೂರ್ವ ಪ್ರಾಥಮಿಕ ಶಿಕ್ಷಣ ಪಡೆದವರಿಗೆ ವರ್ಗಾವಣೆ ಪ್ರಮಾಣಪತ್ರ (ಟಿ.ಸಿ) ಕೊಟ್ಟು ಒಂದನೇ ತರಗತಿ ಸೇರಿಸುವ ವ್ಯವಸ್ಥೆ ಜಾರಿಗೆ ತರಬೇಕು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.