ಬೆಂಗಳೂರು: ‘ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ವಿದ್ಯುತ್ ಕೊರತೆ ಎದುರಾಗಿದೆ. ಈ ವಿಚಾರದಲ್ಲಿ ಟೀಕೆ ಮಾಡುವ ಬಿಜೆಪಿ ನಾಯಕರು ತಮ್ಮ ಅಧಿಕಾರ ಅವಧಿಯಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಎಷ್ಟು ಪ್ರಮಾಣದಲ್ಲಿ ಹೆಚ್ಚಳ ಮಾಡಿದ್ದರು ಎಂಬುದನ್ನು ಹೇಳಲಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸವಾಲು ಹಾಕಿದರು.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಮಳೆ ಪ್ರಮಾಣ ಕಡಿಮೆ ಆಗಿರುವುದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದರು.
‘ಹಿಂದೆ ನಮ್ಮ ಸರ್ಕಾರ ಇದ್ದಾಗಲೂ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ನಾವು ಆಗ 10 ಸಾವಿರದಿಂದ 13 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡಿದ್ದೆವು. ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡಿಲ್ಲ. ಹೀಗಾಗಿ ಈ ಪರಿಸ್ಥಿತಿ ಎದುರಾಗಿದೆ’ ಎಂದರು.
‘ರಾಜ್ಯದ ಅಣೆಕಟ್ಟುಗಳಲ್ಲಿ ನೀರಿನ ಲಭ್ಯತೆ ಕಡಿಮೆ ಇದೆ. ಬರಗಾಲ ಎದುರಾದಾಗ ವಿದ್ಯುತ್ ಉತ್ಪಾದನೆ ಕುಸಿಯುತ್ತದೆ. ಪ್ರತಿವರ್ಷ ಶೇ 10ರಿಂದ ಶೇ 15ರಷ್ಟು ವಿದ್ಯುತ್ ಬೇಡಿಕೆ ಹೆಚ್ಚಾಗುವುದು ವಾಡಿಕೆ. ನಮ್ಮ ಸರ್ಕಾರ ಇನ್ನು 10 ಸಾವಿರ ಎಕರೆಯಲ್ಲಿ ಸೋಲಾರ್ ವಿದ್ಯುತ್ ಹಾಗೂ ಪವನ ವಿದ್ಯುತ್ ಉತ್ಪಾದನೆಗೆ ಕಾರ್ಯಕ್ರಮ ರೂಪಿಸುತ್ತಿದೆ‘ ಎಂದು ತಿಳಿಸಿದರು.
‘ರೈತರಿಂದಲೂ ವಿದ್ಯುತ್ ಬೇಡಿಕೆ ಪ್ರಮಾಣ ಹೆಚ್ಚಾಗಿದೆ. ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ. ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಅವರು ಕೇಂದ್ರ ವಿದ್ಯುತ್ ಸಚಿವರ ಬಳಿ ಚರ್ಚೆ ಮಾಡಿ ಕೇಂದ್ರಿಯ ಗ್ರಿಡ್ಗಳಿಂದ ವಿದ್ಯುತ್ ಪೂರೈಕೆಗೆ ಮನವಿ ಮಾಡಿದ್ದಾರೆ‘ ಎಂದರು.
ಕಾವೇರಿ ವಿಚಾರವಾಗಿ ಮೇಲ್ಮನವಿ: ‘ಕಾವೇರಿ ನೀರಿನ ಹಂಚಿಕೆ ವಿಚಾರವಾಗಿ ಮತ್ತೊಮ್ಮೆ ಕಾವೇರಿ ನೀರು ನಿಯಂತ್ರಣ ಸಮಿತಿ ಮುಂದೆ ಮೇಲ್ಮನವಿ ಸಲ್ಲಿಸುತ್ತೇವೆ’ ಎಂದೂ ಡಿ.ಕೆ. ಶಿವಕುಮಾರ್ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.