ಬೆಳಗಾವಿ: ‘ದೇಶದಲ್ಲಿ ಲಾಕ್ಡೌನ್ ವಿಸ್ತರಣೆ ವಿಚಾರವು ನಾವು ನಿಯಮಗಳನ್ನು ಎಷ್ಟರ ಮಟ್ಟಿಗೆ ಪಾಲಿಸುತ್ತೇವೆ ಎನ್ನುವುದರ ಮೇಲೆ ಅವಲಂಬಿತವಾಗಿದೆ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಸುರೇಶ ಅಂಗಡಿ ತಿಳಿಸಿದರು.
ಇಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಲಾಕ್ಡೌನ್ ಅನ್ನು ಇನ್ನೂ ಹೆಚ್ಚು ಗಂಭೀರವಾಗಿ ತಗೆದುಕೊಂಡರೆ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಇಲ್ಲದಿದ್ದರೆ ಕೊರೊನಾ ವೈರಾಣು ಸೋಂಕು ಹರಡುವಿಕೆಯಿಂದ ದೊಡ್ಡಮಟ್ಟದ ಅನಾಹುತವಾಗುವ ಸಂಭವವಿದೆ. ಹೀಗಾಗಿ ಸಾರ್ವಜನಿಕರು ಮನೆಗಳಲ್ಲೆ ಉಳಿಯಬೇಕು. ಸರ್ಕಾರದ ನಿರ್ದೇಶನಗಳನ್ನು ಪಾಲಿಸಬೇಕು’ ಎಂದು ಕೋರಿದರು.
‘ಜನರಿಗೆ ಅಗತ್ಯ ಸೌಲಭ್ಯಗಳನ್ನು ಮತ್ತು ವಸ್ತುಗಳನ್ನು ಕಲ್ಪಿಸಲು ಸರ್ಕಾರಗಳು ಕ್ರಮ ಕೈಗೊಂಡಿವೆ. ಗೂಡ್ಸ್ ರೈಲುಗಳಲ್ಲಿ ಅಗತ್ಯ ವಸ್ತುಗಳ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಹಳೆಯ ಎಲ್ಲ ರೈಲ್ವೆ ವಲಯಗಳಲ್ಲೂ ರೈಲು ಬೋಗಿಗಳನ್ನು ಆಸ್ಪತ್ರೆಯಾಗಿ ಪರಿವರ್ತಿಸುವ ಕೆಲಸ ನಡೆದಿದೆ’ ಎಂದು ತಿಳಿಸಿದರು.
‘ಇನ್ನೂ 15 ದಿನ ಅತ್ಯಂತ ಕಠಿಣ ಕ್ರಮ ಕೈಗೊಳ್ಳಬೇಕು. ವಲಸೆ ಕಾರ್ಮಿಕರು ಗಲಾಟೆ ಮಾಡುವ ಅಗತ್ಯವಿಲ್ಲ. ಅವರಿಗೆ ಸೌಲಭ್ಯ ಕಲ್ಪಿಸುವುದು ಆಯಾ ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ’ ಎಂದರು.
ಇದಕ್ಕೂ ಮುನ್ನ ಉದ್ಯಮಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ‘ಕಾರ್ಮಿಕರ ಸಂಬಳ ಪಾವತಿಗೆ ವ್ಯವಸ್ಥೆ ಮಾಡಬೇಕು’ ಎಂದು ಸೂಚಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.