ADVERTISEMENT

ಇದೇ 14ರ ಬಳಿಕ ಲಾಕ್‌ಡೌನ್‌ ಸಡಿಲ?: ಮುಖ್ಯಮಂತ್ರಿ ಯಡಿಯೂರಪ್ಪ ಆಶಯ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2020, 20:21 IST
Last Updated 4 ಏಪ್ರಿಲ್ 2020, 20:21 IST
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ   

ಬೆಂಗಳೂರು: ‘ಏ. 14ರ ನಂತರ ಹಂತ ಹಂತವಾಗಿ ಲಾಕ್‌ಡೌನ್‌ ಸಡಿಲಗೊಳ್ಳಬಹುದು. ಪರಿಸ್ಥಿತಿ ಅವಲೋಕಿಸಿ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತಾರೆ’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಬೆಂಗಳೂರಿನ ಶಾಸಕರು, ಸಂಸದರು ಮತ್ತು ಸಚಿವರುಗಳ ಜೊತೆ ಶನಿವಾರ ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 'ಹಂತ ಹಂತವಾಗಿ ಲಾಕ್‌ ಡೌನ್ ಸಡಿಲಗೊಳಿಸಲಾಗುವುದೆಂಬ ಆಶಯ ನನ್ನದು. ಅದಕ್ಕೆ ಎಲ್ಲರೂ ಶಕ್ತಿ ಮೀರಿ ಸಹಕಾರ ನೀಡಬೇಕು‘ ಎಂದು ವಿನಂತಿಸಿದರು.

‘ಲಾಕ್‌ಡೌನ್‌ ಕಟ್ಟುನಿಟ್ಟಾಗಿ ಪಾಲಿಸಲು ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸ
ಲಾಗಿದೆ. ಅಗತ್ಯ ವಸ್ತುಗಳಿಗೆ ಯಾವುದೇ ಕೊರತೆ ಇಲ್ಲ. 480 ಹಾಪ್‌ಕಾಮ್ಸ್ ಮತ್ತು ಸಂಚಾರಿ ಹಾಪ್‌ಕಾಮ್ಸ್‌ಗಳ ಮೂಲಕ ರೈತರಿಂದ ಹಣ್ಣು, ತರಕಾರಿ ಖರೀದಿಸಿ ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗಿದೆ’ ಎಂದರು.

ADVERTISEMENT

‘ಪಡಿತರ ಚೀಟಿದಾರರಿಗೆ ಮುಂಗಡವಾಗಿ ಪಡಿತರ ವಿತರಣೆ ಮಾಡಲಾಗುತ್ತಿದೆ. ಕಾರ್ಡ್ ಇಲ್ಲದವರಿಗೂ ಪಡಿತರ ವಿತರಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಖಾಸಗಿ ಕ್ಲಿನಿಕ್‌ ತೆರೆಯಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ’ ಎಂದು ಮುಖ್ಯಮಂತ್ರಿ ವಿವರಿಸಿದರು.

‘ಕೊರೊನಾ ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿ ವಿಕ್ಟೋರಿಯಾ ಮತ್ತು ಬೌರಿಂಗ್ ಆಸ್ಪತ್ರೆಯಲ್ಲಿ 650 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ರಾಜ್ಯದಲ್ಲಿ ಅಗತ್ಯ ವಸ್ತುಗಳಿಗೆ ಯಾವುದೇ ಕೊರತೆಯಿಲ್ಲ. ಜನರು ಅನಗತ್ಯ ಗೊಂದಲ ಮಾಡಿಕೊಂಡು ವಸ್ತುಗಳ ಖರೀದಿಗೆ ಮುಗಿ ಬೀಳುವ ಅಗತ್ಯ ಇಲ್ಲ. ಕೊಳೆಗೇರಿ ಪ್ರದೇಶದ ಜನರಿಗೆ ಉಚಿತ ಹಾಲು ಸರಬರಾಜು ಮಾಡಲಾಗುತ್ತಿದೆ’ ಎಂದರು. ‘ಸಾರ್ವಜನಿಕರು ಅನಗತ್ಯವಾಗಿ ರಸ್ತೆಗಳಲ್ಲಿ ಓಡಾಡಬಾರದು. ರಾಜ್ಯದಲ್ಲಿ 17 ಸಹಾಯವಾಣಿ ಆರಂಭಿಸಲಾಗಿದೆ. ಅಸಂಘಟಿತ ಕಾರ್ಮಿಕರು ಹಾಗೂ ವಲಸಿಗರಿಗೆ ಊಟ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.