ADVERTISEMENT

ಲಾಕ್‌ಡೌನ್ ವಿಸ್ತರಣೆ ಬಗ್ಗೆ ನಾಳೆ ತೀರ್ಮಾನ: ಯಡಿಯೂರಪ್ಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಏಪ್ರಿಲ್ 2020, 10:10 IST
Last Updated 9 ಏಪ್ರಿಲ್ 2020, 10:10 IST
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)   

ಬೆಂಗಳೂರು: ರಾಜ್ಯದಲ್ಲಿ ಇನ್ನೂ 15 ದಿನಗಳ ಕಾಲ ಲಾಕ್‌ಡೌನ್‌ ವಿಸ್ತರಿಸಲು ಸಚಿವ ಸಂಪುಟದ ಎಲ್ಲ ಸದಸ್ಯರು ಒತ್ತಾಯ ಮಾಡಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಜತೆ ಚರ್ಚಿಸಿ ಅಂತಿಮ ತೀರ್ಮಾನ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಅವರು ವಿವರ ನೀಡಿದರು.

ಲಾಕ್‌ಡೌನ್‌ ಅನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು. ಒಂದು ವೇಳೆ ಯಾರಾದರೂ ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಬೆಂಗಳೂರಿನಲ್ಲಿ ಲಾಕ್‌ಡೌನ್‌ ಉಲ್ಲಂಘಿಸಿದವರ ಸುಮಾರು 10,000 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಒಂದು ವೇಳೆ ಜನ ಕಿವಿಗೊಡದೇ ಇದ್ದಲ್ಲಿ, ಮತ್ತಷ್ಟು ಕಠಿಣ ಕ್ರಮ ತಗೆದುಕೊಳ್ಳಲಾಗುವುದು ಎಂದು ಯಡಿಯೂರಪ್ಪ ಎಚ್ಚರಿಕೆ ನೀಡಿದರು.

ADVERTISEMENT

ಸಚಿವರು ಮತ್ತು ಶಾಸಕರ ವೇತನ ಕಡಿತ:ಕೋವಿಡ್‌–19 ವಿರುದ್ಧದ ಹೋರಾಟಕ್ಕೆ ಸಚಿವರು, ಶಾಸಕರು ಮತ್ತು ವಿಧಾನಪರಿಷತ್‌ ಸದಸ್ಯ ವೇತನದಲ್ಲಿ ಶೇ 30 ರಷ್ಟು ಕಡಿತ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಸ್ಪೀಕರ್‌, ಡೆಪ್ಯೂಟಿ ಸ್ಪೀಕರ್‌ಗಳ ವೇತನ ಕಡಿತ ಮಾಡಲಾಗುವುದು. ಇದಕ್ಕೆ ಎಲ್ಲ ಪಕ್ಷಗಳ ನಾಯಕರೂ ಒಪ್ಪಿಗೆ ನೀಡಲಾಗಿದೆ. ವೇತನ ಕಡಿತದಿಂದ ಸುಮಾರು ₹16 ಕೋಟಿಗಳಷ್ಟು ಉಳಿತಾಯವಾಗುತ್ತದೆ. ಈ ಹಣವನ್ನು ಕೋವಿಡ್‌–19 ನಿಧಿಗೆ ನೀಡಲು ತೀರ್ಮಾನಿಸಲಾಗಿದೆ. ಇದಕ್ಕಾಗೊ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.