ADVERTISEMENT

‘ಕೈ’ಗೆ ಬಿಜೆಪಿ ಅತೃಪ್ತರ ಬೆಂಬಲ: ಸಿ.ಎಂ. ಇಬ್ರಾಹಿಂ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2019, 20:00 IST
Last Updated 9 ಏಪ್ರಿಲ್ 2019, 20:00 IST
ಸಿ.ಎಂ. ಇಬ್ರಾಹಿಂ
ಸಿ.ಎಂ. ಇಬ್ರಾಹಿಂ   

ಬೆಂಗಳೂರು: ‘ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್‌ ಅವರಿಗೆ ಟಿಕೆಟ್‌ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಬಿಜೆಪಿ ನಾಯಕರು ಕಾಂಗ್ರೆಸ್‌ ಅಭ್ಯರ್ಥಿ ಬಿ.ಕೆ. ಹರಿಪ್ರಸಾದ್‌ ಪರ ಕೆಲಸ ಮಾಡುತ್ತಿದ್ದಾರೆ’ ಎಂದು ವಿಧಾನಪರಿಷತ್‌ ಕಾಂಗ್ರೆಸ್‌ ಸದಸ್ಯ ಸಿ.ಎಂ. ಇಬ್ರಾಹಿಂ ಹೇಳಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಮೋದಿ ಬಿಟ್ಟರೆ ಬಿಜೆಪಿಯವರಿಗೆ ಬೇರೆ ವಿಷಯಗಳೇ ಇಲ್ಲ. ಆದರೆ, ಮೋದಿಯ ಸರ್ವಾಧಿಕಾರಿ ಧೋರಣೆಯಿಂದ ಜನ ರೋಸಿ ಹೋಗಿದ್ದಾರೆ. ಅದಕ್ಕೆ ಈ ಚುನಾವಣೆಯಲ್ಲಿ ಜನ ತಕ್ಕ ಉತ್ತರ ನೀಡಲಿದ್ದಾರೆ’ ಎಂದರು.

‘ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲಿ ಕೋಮುವಾದಿ ವಿಚಾರಗಳಿವೆ. ಇದನ್ನು ಗಮನಿಸಿ ಚುನಾವಣಾ ಆಯೋಗ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕು’ ಎಂದೂ ಅವರು ಒತ್ತಾಯಿಸಿದರು.

ADVERTISEMENT

‘ಅಲ್ಪಸಂಖ್ಯಾತರು ಕಾಂಗ್ರೆಸ್‌ ಬೆಂಬಲಕ್ಕೆ ನಿಂತಿದ್ದಾರೆ. ಮುಸ್ಲಿಂ ಸಮುದಾಯ ಒಟ್ಟಾಗಿ ಕಾಂಗ್ರೆಸ್‌ ಅಭ್ಯರ್ಥಿಗಳ ‍ಪರ ಕೆಲಸ ಮಾಡುತ್ತಿದೆ’ ಎಂದರು.

‘ಚಿತ್ರನಟರನ್ನು ನೋಡಲು ಮಂಡ್ಯದಲ್ಲಿ ಜನ ಸೇರುತ್ತಿದ್ದಾರೆ. ರಾಜಕೀಯದಲ್ಲಿ ಚಿತ್ರನಟರ ಒರಸೆಗಳು ನಡೆಯುವುದಿಲ್ಲ. ನಿಖಿಲ್‌ ಕುಮಾರಸ್ವಾಮಿಗೆ ದೇವೇಗೌಡರ ಮೊಮ್ಮಗ ಎಂಬ ಹಣೆಪಟ್ಟಿ ಇದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.