ಕರ್ನಾಟಕ ಲೋಕಾಯುಕ್ತ
– ಪ್ರಜಾವಾಣಿ ಚಿತ್ರ
ಬೆಂಗಳೂರು: ಯಾದಗಿರಿ ಜಿಲ್ಲಾ ವ್ಯಾಪ್ತಿಯಲ್ಲಿ ಕೆಟ್ಟಿರುವ 247 ಆರ್ಒ ನೀರು ಶುದ್ಧೀಕರಣ ಘಟಕಗಳನ್ನು ದುರಸ್ತಿ ಮಾಡದೇ ಇರುವ ಪ್ರಕರಣದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನು ಪ್ರತಿವಾದಿಯನ್ನಾಗಿಸಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ ಸುಮಾರು 250 ಆರ್ಒ ನೀರು ಶುದ್ಧೀಕರಣ ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಅಶೋಕ್ ಅವರು 2022ರಲ್ಲಿ ಸಲ್ಲಿಸಿದ್ದ ದೂರಿನ ಅನ್ವಯ ಲೋಕಾಯುಕ್ತರು ಪ್ರಕರಣ ದಾಖಲಿಸಿಕೊಂಡಿದ್ದರು. ಆರ್ಒ ಘಟಕಗಳ ಸ್ಥಿತಿಯ ಬಗ್ಗೆ ವರದಿ ನೀಡಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗೆ (ಸಿಇಒ) ಸೂಚಿಸಿದ್ದರು.
ಸಿಇಒ ವರದಿ ಸಲ್ಲಿಸದ ಕಾರಣ, ಮಂಗಳವಾರ ನಡೆದ ವಿಚಾರಣೆಗೆ ಹಾಜರಾಗುವಂತೆ ಸೆಪ್ಟೆಂಬರ್ 10ರಂದು ಸೂಚಿಸಿದ್ದರು. ಆದರೆ, ಸಿಇಒ ಹಾಜರಾಗಿರಲಿಲ್ಲ ವಿಚಾರಣೆಗೆ ಮತ್ತು ತಮ್ಮ ಬದಲಿಗೆ ಕಾರ್ಯನಿರ್ವಾಹಕ ಎಂಜಿನಿಯರ್ ಒಬ್ಬರನ್ನು ಕಳುಹಿಸಿದ್ದರು. ಈ ಘಟಕಗಳ ದುರಸ್ತಿಗೆ ಅನುದಾನ ಲಭ್ಯವಿರುವುದಿಲ್ಲ ಎಂದು ಅವರು ಲೋಕಾಯುಕ್ತರಿಗೆ ಮಾಹಿತಿ ನೀಡಿದ್ದರು.
ವಿಚಾರಣೆಗೆ ಸಿಇಒ ಹಾಜರಾಗದೇ ಇರುವ ಮತ್ತು ಹಲವು ವರ್ಷಗಳ ನಂತರವೂ, ನೀರು ಶುದ್ಧೀಕರಣ ಘಟಕಗಳನ್ನು ದುರಸ್ತಿ ಮಾಡದೇ ಇರುವ ಬಗ್ಗೆ ಲೋಕಾಯುಕ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.
ಈ ಪ್ರಕರಣದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರನ್ನು ಪ್ರತಿವಾದಿಯಾಗಿಸಿ ಲೋಕಾಯುಕ್ತರು ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 17ರಂದು ನಿಗದಿಯಾಗಿರುವ ವಿಚಾರಣೆಗೆ ಖುದ್ದು ಹಾಜರಾಗುವಂತೆ ಯಾದಗಿರಿ ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ತಾಕೀತು ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.