ಕರ್ನಾಟಕ ಲೋಕಾಯುಕ್ತ
– ಪ್ರಜಾವಾಣಿ ಚಿತ್ರ
ಬೆಂಗಳೂರು: ಕರ್ನಾಟಕ ಗೃಹ ಮಂಡಳಿಯ ನಿವೇಶನವನ್ನು ಅನರ್ಹರಿಗೆ, ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣದಲ್ಲಿ, ಮಂಡಳಿಯ ಅಧಿಕಾರಿಯೂ ಸೇರಿ ಮೂವರ ಮನೆ ಹಾಗೂ ಮಂಡಳಿಯ ಯಲಹಂಕ ಕಚೇರಿಯ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ದಾಳಿ ನಡೆಸಿದ್ದಾರೆ.
ಮಂಡಳಿಯು ಯಲಹಂಕದ ನ್ಯೂಟೌನ್ನ ‘ಎ’ ಸೆಕ್ಟರ್ನಲ್ಲಿ ಅಭಿವೃದ್ಧಿ ಪಡಿಸಿದ್ದ ನಿವೇಶನ ಸಂಖ್ಯೆ 271 ಅನ್ನು ಅನರ್ಹರೊಬ್ಬರಿಗೆ ಮಾರಾಟ ಮಾಡಲಾಗಿದೆ. ಈ ಮೂಲಕ ಸರ್ಕಾರಕ್ಕೆ ₹10 ಕೋಟಿ ನಷ್ಟ ಉಂಟು ಮಾಡಲಾಗಿದೆ ಎಂದು ಲೋಕಾಯುಕ್ತದಲ್ಲಿ ದೂರು ದಾಖಲಾಗಿತ್ತು.
‘ಯಲಹಂಕದಲ್ಲಿನ ಕಚೇರಿ ಶೋಧದ ವೇಳೆ, ಅಕ್ರಮಕ್ಕೆ ಸಂಬಂಧಿಸಿದ ಹಲವು ದಾಖಲೆಗಳು ಪತ್ತೆಯಾಗಿವೆ. ಹೀಗಾಗಿ ಮಂಡಳಿಯು ಅಭಿವೃದ್ಧಿಪಡಿಸಿರುವ ಸುಮಾರು ₹1,500 ಕೋಟಿ ಮೌಲ್ಯದ ನಿವೇಶನಗಳಿಗೆ ಸಂಬಂಧಿಸಿದ ದಾಖಲೆ ಮತ್ತು ಲೆಕ್ಕಪತ್ರಗಳನ್ನು ಸಲ್ಲಿಸಿ ಎಂದು, ಮಂಡಳಿಯ ಆಯುಕ್ತರಿಗೆ ಸೂಚಿಸಲಾಗಿದೆ’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
‘ಗೃಹ ಮಂಡಳಿಯ ಯಲಹಂಕ ಉಪನಗರ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸೈಯದ್ ಅಸ್ಗರ್, ನಿವೇಶನ ಖರೀದಿಸಿದ್ದ ಗೋವಿಂದಯ್ಯ ಮತ್ತು ಸತೀಶ್ ಹರಿಣಿ ಎಂಬುವವರ ಮನೆಗಳ ಮೇಲೆ ದಾಳಿ ಮಾಡಿ, ಶೋಧ ನಡೆಸಲಾಯಿತು. ನಿವೇಶನಗಳ ವ್ಯಾಜ್ಯಕ್ಕೆ ಸಂಬಂಧಿಸಿದ ಹಲವು ದಾಖಲೆಗಳು ಪತ್ತೆಯಾಗಿವೆ’ ಎಂದು ಹೇಳಿದ್ದಾರೆ.
ಶೋಧದ ವೇಳೆ ಹಲವು ದಾಖಲೆಗಳನ್ನು ವಶಕ್ಕೆ ಪಡೆದ ತನಿಖಾಧಿಕಾರಿಗಳು, ಮೂವರಿಗೂ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.