ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಸತತ ಎರಡು ಬಾರಿ ಜಯಗಳಿಸಿರುವ ಬಿಜೆಪಿ ಮೂರನೇ ಬಾರಿಯೂ ಪ್ರಾಬಲ್ಯ ಸಾಧಿಸಲು ಮುಂದಾಗಿದೆ. ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸಾಧ್ಯವಾದರೆ, ಪ್ರಬಲ ಪೈಪೋಟಿ ಎದುರಾಗಲಿದೆ.
ಈ ಹಿಂದೆ ಧನಂಜಯ ಕುಮಾರ್ ಅವರು ಬಿಜೆಪಿಯಿಂದ ಈ ಕ್ಷೇತ್ರದಲ್ಲಿ ಜಯಗಳಿಸಿದ್ದು, ಅದಕ್ಕಿಂತ ಪೂರ್ವದಲ್ಲಿ ಕಾಂಗ್ರೆಸ್ನಿಂದ ಬಿ. ಜನಾರ್ದನ ಪೂಜಾರಿ ಜಯಗಳಿಸಿದ್ದರು.
ಉಡುಪಿ–ಚಿಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ನೇರ ಹಣಾಹಣಿ. ಈ ಕ್ಷೇತ್ರ ಬಿಜೆಪಿಯ ಭದ್ರಕೋಟೆ. ಈ ಬಾರಿ ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಲು ಹಾಲಿ ಸಂಸದೆ ಶೋಭಾ ಕರಂದ್ಲಾಜೆ, ಜಯಪ್ರಕಾಶ್ ಹೆಗ್ಡೆ ತೀವ್ರ ಪೈಪೋಟಿ ನಡೆಸಿದ್ದಾರೆ. ಜಯಪ್ರಕಾಶ್ ಹೆಗ್ಡೆ 2009 ಹಾಗೂ 2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ಈಗ ಬಿಜೆಪಿಯಲ್ಲಿದ್ದಾರೆ.
ಕಾಂಗ್ರೆಸ್ನಿಂದ ವಿನಯ್ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್ ಹಾಗೂ ಚಿಕ್ಕಮಗಳೂರಿನ ಡಾ.ಆರತಿ ಕೃಷ್ಣ, ಡಾ.ವಿಜಯ್ ಕುಮಾರ್ ಟಿಕೆಟ್ ಆಕಾಂಕ್ಷಿತರು. ಉಡುಪಿ ಚಿಕ್ಕಮಗಳೂರು ಕ್ಷೇತ್ರವನ್ನು ಬಿಟ್ಟುಕೊಡುವಂತೆ ಜೆಡಿಎಸ್ ಒತ್ತಡ ಹಾಕುತ್ತಿದೆ ಎನ್ನಲಾಗಿದ್ದು, ಕ್ಷೇತ್ರ ಸಿಕ್ಕರೆ ಬೋಜೇಗೌಡ ಹಾಗೂ ಮಾಜಿ ಶಾಸಕ ವೈಎಸ್ವಿ ದತ್ತ ಆಕಾಂಕ್ಷಿಗಳಾಗುವ ಸಾಧ್ಯತೆ ಹೆಚ್ಚಾಗಿದೆ.
ಬಾಗಲಕೋಟೆ
ಬಿಜೆಪಿಯ ಭದ್ರಕೋಟೆ ಎನಿಸಿದ ಬಾಗಲಕೋಟೆ ಕೈವಶಕ್ಕೆ ಉಭಯ ಪಕ್ಷಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಈಗಾಗಲೇ ಬಿಜೆಪಿಯ ಪಿ.ಸಿ.ಗದ್ದಿಗೌಡರ ಹ್ಯಾಟ್ರಿಕ್ ಗೆಲುವಿನ ಶ್ರೇಯ ತಮ್ಮದಾಗಿಸಿಕೊಂಡಿದ್ದಾರೆ. ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಈ ಕ್ಷೇತ್ರ ವ್ಯಾಪ್ತಿಯಲ್ಲಿರುವ ಬಾದಾಮಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಅವರಿಗೂ ಇಲ್ಲಿ ಪಕ್ಷದ ಗೆಲುವು ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಹೀಗಾಗಿ ಕಾಂಗ್ರೆಸ್ ಟಿಕೆಟ್ಗೆ ಪೈಪೋಟಿ ಇದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈ ಭಾಗದಲ್ಲಿ ಜೆಡಿಎಸ್ ಕೂಡ ಗಣನೀಯ ಮತಗಳನ್ನು ಪಡೆದಿದ್ದು, ಮೈತ್ರಿ ಅಭ್ಯರ್ಥಿಗೆ ಅನುಕೂಲ ಎಂದೇ ವಿಶ್ಲೇಷಿಸಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.