ಎಂ.ಬಿ. ಪಾಟೀಲ
ಬೆಂಗಳೂರು: ಕೋರ್ಟ್ ನಿರ್ದೇಶನ, ಸಂಪುಟ ಸಭೆಯ ನಿರ್ಣಯದಂತೆ ಕಾನೂನಿಗೆ ಅನುಸಾರವಾಗಿ ಜಿಂದಾಲ್ ಉಕ್ಕು ಕಂಪನಿಗೆ 3,677 ಎಕರೆ ಗುತ್ತಿಗೆ ನೀಡಲಾಗಿದೆ. ಹಾಗೆ ಮಾಡದಿದ್ದಲ್ಲಿ, ಬಂಡವಾಳ ಹೂಡಿಕೆದಾರರಿಗೆ ತಪ್ಪು ಸಂದೇಶ ರವಾನೆಯಾಗುತ್ತಿತ್ತು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಹೇಳಿದರು.
ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, ಹಿಂದೆ ಇದ್ದ ಮಾರುಕಟ್ಟೆ ಬೆಲೆಗೆ ಅನುಗುಣವಾಗಿ ನೀಡಲಾಗಿದೆ. ಕಂಪನಿ ಸರ್ಕಾರದ ಷರತ್ತುಗಳನ್ನು ಪಾಲಿಸಿದೆ. ರಾಜ್ಯದ ಕೈಗಾರಿಕೆಗಳಿಗೆ ಅನುಸರಿಸುವ ನಿಯಮಗಳನ್ನೇ ಜಿಂದಾಲ್ಗೂಗೂ ಅನ್ವಯಿಸಲಾಗಿದೆ. ವಾಸ್ತವವಾಗಿ ಒಂಬತ್ತು ವರ್ಷಗಳು ವಿಳಂಬವಾಗಿದೆ’ ಎಂದರು.
ರಾಜ್ಯದಲ್ಲಿ ಜಿಂದಾಲ್ ಕಂಪನಿ ₹90 ಸಾವಿರ ಕೋಟಿ ಹೂಡಿಕೆ ಮಾಡಿದೆ, 50 ಸಾವಿರ ಉದ್ಯೋಗ ಕೊಟ್ಟಿದೆ. ಸರ್ಕಾರ ನೀಡಿದ ಜಮೀನಿನಲ್ಲಿ ಶೇ 51ರಷ್ಟನ್ನು 10 ವರ್ಷಗಳಲ್ಲಿ ಬಳಸಿಕೊಂಡಿದೆ. ಹಾಗಾಗಿ, ಕೈಗಾರಿಕಾ ನೀತಿಯಂತೆ ಗುತ್ತಿಗೆ ಮಾರಾಟ ಮಾಡಲಾಗಿದೆ ಎಂದು ಹೇಳಿದರು.
‘ಕೈಗಾರಿಕಾ ಕ್ಷೇತ್ರದಲ್ಲಿ ತಮಿಳುನಾಡು, ಮಹಾರಾಷ್ಟ್ರ, ಗುಜರಾತ್, ಆಂಧ್ರಪ್ರದೇಶ ಮತ್ತು ತೆಲಂಗಾಣಗಳ ಜೊತೆಗೆ ಪೈಪೋಟಿ ಎದುರಿಸುತ್ತಿದ್ದೇವೆ. ಕೆಲ ರಾಜ್ಯಗಳು ಉಚಿತವಾಗಿ ಭೂಮಿ ಕೊಡುತ್ತಿವೆ. ಹಿಂದೆ ಜಿಂದಾಲ್ ಕಂಪನಿಗೆ ಭೂಮಿ ನೀಡಲು ವಿರೋಧಿಸಿರಲಿಲ್ಲ, ಜನಾರ್ದನ ರೆಡ್ಡಿ ವಿರುದ್ಧವಷ್ಟೇ ಧ್ವನಿ ಎತ್ತಲಾಗಿತ್ತು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.