ಬೆಂಗಳೂರು: ಬಂಗಾರಪೇಟೆ ಮಾಜಿ ಶಾಸಕ ಎಂ.ನಾರಾಯಣಸ್ವಾಮಿ ಹಾಗೂ ಪುರಸಭೆ ಸದಸ್ಯ ಚಂದ್ರಾರೆಡ್ಡಿ ತಮ್ಮ ಬೆಂಬಲಿಗರ ಜತೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು.
ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಶಿವಕುಮಾರ್, ‘ಎರಡು ವರ್ಷಗಳ ನಂತರ ಬೇರೆ ಪಕ್ಷದಿಂದ ಅನೇಕ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಮುಂದಾಗಿದ್ದಾರೆ’ ಎಂದರು.
‘ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕರಾದ ಎಂ.ನಾರಾಯಣಸ್ವಾಮಿ ಹಾಗೂ ನಮ್ಮ ಪಕ್ಷದ ಕೋಲಾರದ ಮಾಜಿ ಜಿಲ್ಲಾ ಅಧ್ಯಕ್ಷರಾಗಿದ್ದ ಚಂದ್ರಾರೆಡ್ಡಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಇವರ ಜತೆಗೆ ಬಿಜೆಪಿಯ ಸ್ಥಳೀಯ ಸುಮಾರು 50 ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ. ಎರಡು ವರ್ಷಗಳ ನಂತರ ನಾವು ಮತ್ತೆ ಹೊಸ ಪರ್ವವನ್ನು ಆರಂಭಿಸಿದ್ದೇವೆ’ ಎಂದು ತಿಳಿಸಿದರು.
‘ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಜನರ ಬದುಕಿಗೆ ದಾರಿಯಾಗುತ್ತಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್ನ ಅನೇಕ ಕಾರ್ಯಕರ್ತರು, ನಾಯಕರು ಕಾಂಗ್ರೆಸ್ ಪಕ್ಷವನ್ನು ಸೇರಲು ಮುಂದಾಗಿದ್ದಾರೆ. ಹೀಗಾಗಿ, ಕಾಂಗ್ರೆಸ್ ಪಕ್ಷ ಸೇರಲು ಬಯಸುವವರನ್ನು ಪಕ್ಷ ಸೇರ್ಪಡೆ ಮಾಡಿಕೊಳ್ಳಲು ರಾಜ್ಯದ ಎಲ್ಲ ಶಾಸಕರು ಹಾಗೂ ಜಿಲ್ಲಾಧ್ಯಕ್ಷರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಹೊಸಬರು, ಹಳಬರು ಎಂಬ ಬೇಧವಿಲ್ಲದೆ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.