ADVERTISEMENT

ರಾಜೀನಾಮೆ ಅಂಗೀಕಾರಕ್ಕೆ ಶಿಫಾರಸು?

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮುಖಂಡರ ವರದಿ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2019, 19:34 IST
Last Updated 20 ಡಿಸೆಂಬರ್ 2019, 19:34 IST
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ   

ನವದೆಹಲಿ: ರಾಜ್ಯ ಕಾಂಗ್ರೆಸ್‌ ಸ್ಥಿತಿಗತಿ ಅರಿಯಲು ಗುರುವಾರ ಬೆಂಗಳೂರಿಗೆ ಭೇಟಿ ನೀಡಿ ಮುಖಂಡರ ಅಭಿಪ್ರಾಯ ಸಂಗ್ರಹಿಸಿದ್ದ ಮಧುಸೂದನ ಮಿಸ್ತ್ರಿ ಹಾಗೂ ಭಕ್ತಚರಣದಾಸ್‌, ಈ ಕುರಿತ ವರದಿಯನ್ನು ಶುಕ್ರವಾರ ಸಂಜೆ ವರಿಷ್ಠರಿಗೆ ನೀಡಿದ್ದಾರೆ.

ಸಿದ್ದರಾಮಯ್ಯ ಹಾಗೂ ದಿನೇಶ್‌ ಗುಂಡೂರಾವ್‌ ಸಲ್ಲಿಸಿರುವ ರಾಜೀನಾಮೆ ಸ್ವೀಕರಿಸಿ ಪಕ್ಷದ ರಾಜ್ಯ ಘಟಕವನ್ನು ಪುನರ್‌ರಚಿಸಬೇಕು ಎಂದು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಿರುವ ವರದಿಯಲ್ಲಿ ಶಿಫಾರಸು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂವರ ಹೆಸರು: ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ತಲಾ ಮೂವರ ಹೆಸರನ್ನು ಸೂಚಿಸಲಾಗಿದ್ದು, ಸಿದ್ದರಾಮಯ್ಯ ಅವರನ್ನೂ ಪ್ರಮುಖ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ವರದಿಯಲ್ಲಿ ತಿಳಿಸಲಾಗಿದೆ.

ADVERTISEMENT

ರಾಜ್ಯ ವಿಧಾನಸಭೆ ಚುನಾವಣೆಗೆ ಮೂರು ವರ್ಷಗಳ ಅವಧಿ ಇರುವುದರಿಂದ ಪಕ್ಷ ಸಂಘಟನೆಗೆ ಒತ್ತು ನೀಡುವ ಹಾಗೂ ಹಿರಿಯರು– ಕಿರಿಯರನ್ನು ಒಟ್ಟಾಗಿ ಕೊಂಡೊಯ್ಯಬಲ್ಲ ನಾಯಕನಿಗೇ ಕೆಪಿಸಿಸಿಯ ಸಾರಥ್ಯ ನೀಡಿದರೆ ಒಳಿತು. ಮೂಲ ಕಾಂಗ್ರೆಸ್ಸಿಗರನ್ನು ಕಡೆಗಣಿಸದೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ವರದಿಯಲ್ಲಿ ಒತ್ತಿ ಹೇಳಲಾಗಿದೆ ಎಂದು ಹಿರಿಯ ಮುಖಂಡರೊಬ್ಬರು ‘ಪ್ರಜಾವಾಣಿ’ಗೆ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.