ಚಿತ್ರದುರ್ಗ: ಇಲ್ಲಿನ ಮಾಚಿದೇವ ಮಹಾಸಂಸ್ಥಾನ ಮಠ ಸ್ಥಾಪಿಸಿದ ‘ಮಾಚಿದೇವಶ್ರೀ’ ಪ್ರಶಸ್ತಿಗೆ ವಿರೋಧ ಪಕ್ಷದ ನಾಯಕಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.
‘ಪ್ರಶಸ್ತಿಯ ₹ 25 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ಜ.5 ಮತ್ತು 6 ರಂದು ಮಠದಲ್ಲಿ ಆಯೋಜಿಸಿದ ‘ಕಾಯಕ ಜನೋತ್ಸವ’ದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಪಟ್ಟಾಧಿಕಾರದ ನಾಲ್ಕನೇ ವರ್ಷದ ಸಂಭ್ರಮದ ಅಂಗವಾಗಿ ಜನೋತ್ಸವ ಆಯೋಜಿಸಲಾಗಿದೆ’ ಎಂದು ಮಹಾಸಂಸ್ಥಾನದ ಪೀಠಾಧ್ಯಕ್ಷ ಬಸವ ಮಾಚಿದೇವ ಸ್ವಾಮೀಜಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
‘ಸಚಿವ ಮುನಿರತ್ನ, ಸಂಸದ ಕರಡಿ ಸಂಗಣ್ಣ, ಶಾಸಕರಾದ ಭೀಮಾನಾಯ್ಕ್, ಉದಯ ಬಿ.ಗರುಡಾಚಾರ್, ಮಾಜಿ ಸಚಿವ ಎಚ್.ಆಂಜನೇಯ ಅವರಿಗೆ ‘ಮಾಚಿದೇವ ರತ್ನ’ ಹಾಗೂ ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕಿ ಪ್ರೊ.ಅನ್ನಪೂರ್ಣಮ್ಮ ಅವರಿಗೆ ‘ಮಲ್ಲಿಗೆಮ್ಮ ಮಾತೋಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ’ ಎಂದು ತಿಳಿಸಿದರು.
‘ಅತಿ ಚಿಕ್ಕ ಹಾಗೂ ಶೋಷಿತ ಸಮುದಾಯದವಾದ ಮಡಿವಾಳರು ಇಂದಿಗೂ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿಲ್ಲ. ಈಗಾಗಲೇ ದೇಶದ 18 ರಾಜ್ಯಗಳಲ್ಲಿ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲಾಗಿದೆ. ಅದರಂತೆ ರಾಜ್ಯ ಸರ್ಕಾರ ಕೂಡ ಪ್ರೊ.ಅನ್ನಪೂರ್ಣಮ್ಮ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲು ಶೀಘ್ರ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.