ಹುಬ್ಬಳ್ಳಿ: ಗೋವಾ ಸರ್ಕಾರವು ಮಹದಾಯಿ ನದಿ ನೀರನ್ನು ಕುಡಿಯುವ ಉದ್ದೇಶಕ್ಕೆ ಬಳಸಿಕೊಳ್ಳಲು ₹100 ಕೋಟಿ ಮೊತ್ತದ ವಿಶೇಷ ಯೋಜನೆ ರೂಪಿಸುತ್ತಿದ್ದು, ಇದರ ವಿರುದ್ಧ ನ್ಯಾಯ ಮಂಡಳಿ ಅಥವಾ ನ್ಯಾಯಾಲಯದಲ್ಲಿ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಗುರುವಾರ ಪತ್ರ ಬರೆದಿರುವ ಹೊರಟ್ಟಿ, ‘ಮಹದಾಯಿ ನ್ಯಾಯ ಮಂಡಳಿ ಅಂತಿಮ ತೀರ್ಪಿನ ವಿರುದ್ಧ ಗೋವಾ ಮತ್ತು ಕರ್ನಾಟಕ ರಾಜ್ಯಗಳೆರಡೂ ಮೇಲ್ಮನವಿ ಸಲ್ಲಿಸಿವೆ. ಪರಿಸ್ಥಿತಿ ಹೀಗಿರುವಾಗ ಹೊಸ ಯೋಜನೆಯನ್ನು ಗೋವಾ ಕೈಗೆತ್ತಿಕೊಳ್ಳುತ್ತಿರುವುದು ಸರಿಯಲ್ಲ’ ಎಂದು ಅವರು ಟೀಕಿಸಿದ್ದಾರೆ.
‘ಮಹದಾಯಿಯಿಂದ ಪೋಲಾಗಿ ಹೋಗುತ್ತಿರುವ ನೀರನ್ನು ಕುಡಿಯುವ ಉದ್ದೇಶಕ್ಕೆ ಬಳಸಿಕೊಳ್ಳಲು ಗಾಂಜೆ ಎಂಬಲ್ಲಿ ದೊಡ್ಡ ಬಾಂದಾರ ನಿರ್ಮಿಸುತ್ತಿರುವುದಾಗಿ ಗೋವಾದ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಪಣಜಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ’ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.