ADVERTISEMENT

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶಿವರಾತ್ರಿ ಸಂಪ್ರದಾಯದಂತೆ ‌ಆಚರಣೆಯಾಗಲಿ: ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2021, 21:27 IST
Last Updated 10 ಮಾರ್ಚ್ 2021, 21:27 IST
ಕುಕ್ಕೆ ಸುಬ್ರಹ್ಮಣ್ಯ ದೇವಾಲಯ
ಕುಕ್ಕೆ ಸುಬ್ರಹ್ಮಣ್ಯ ದೇವಾಲಯ   

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ‌ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಹಿಂದಿನ ಸಂಪ್ರದಾಯದಂತೆಯೇ ಮಹಾಶಿವರಾತ್ರಿ ಆಚರಣೆ ಮಾಡಿ ಎಂದು ದೇವಾಲಯದ ಆಡಳಿತ ಮಂಡಳಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಶೈವ ಪದ್ಧತಿ ಅನುಸಾರ ಹಬ್ಬ ಆಚರಣೆ ಮಾಡಲು ಅವಕಾಶ ಕಲ್ಪಿಸಿ ಹಿಂದು ಧಾರ್ಮಿಕ ಮತ್ತು ದತ್ತಿ ಇಲಾಖೆ ಆಯುಕ್ತರು ಹೊರಡಿಸಿದ್ದ ಆದೇಶ ಪ್ರಶ್ನಿಸಿ ದೇವಾಲಯದ ಭಕ್ತರಾದ ಬಿ.ಆರ್. ಮುರಳೀಧರ್, ವಿಜಯಸಿಂಹ ಮತ್ತು ಇತರರು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಏಕ ಸದಸ್ಯ ಪೀಠ, ‘ಹೊಸ ಪದ್ಧತಿ ಅನುಸರಿಸುವುದು ಬೇಡ. ದೇವಾಲಯದಲ್ಲಿ ಮೊದಲಿನಿಂದಲೂ ಯಾವ ಪದ್ಧತಿ ಅನುಸರಿಸಿಕೊಂಡು ಬರಲಾಗುತ್ತಿದೆಯೋ ಅದೇ ಪದ್ಧತಿಯ ಅನುಸಾರ ಶಿವರಾತ್ರಿ ಆಚರಣೆ ನಡೆಯಲಿ’ ಎಂದು ಮಧ್ಯಂತರ ಆದೇಶದಲ್ಲಿ ತಿಳಿಸಿದೆ.

ADVERTISEMENT

‘ಶತಮಾನಗಳಿಂದ ವೈಷ್ಣವ ಸಂಪ್ರದಾಯದಂತೆ ಪೂಜಾ ವಿಧಿವಿಧಾನ ನಡೆಸಲಾಗುತ್ತಿದೆ. ಈ ಬಾರಿಯ ಶಿವರಾತ್ರಿ ಸಂದರ್ಭದಲ್ಲಿ ಬಿಲ್ವಾರ್ಚನೆ, ರುದ್ರ ಪಾರಾಯಣ, ರುದ್ರ ಹೋಮ ಸೇರಿ ಶೈವ ಸಂಪ್ರದಾಯದ ಪ್ರಕಾರ ಹೊಸ ಆಚರಣೆಗಳಿಗೆ ಅವಕಾಶ ಕಲ್ಪಿಸಿ ಮಾ.3ರಂದು ಆದೇಶ ಹೊರಡಿಸಲಾಗಿದೆ. ಇದು ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಕಾಯ್ದೆಯ ಉಲ್ಲಂಘನೆಯಾಗಿದೆ’ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದರು.

ಮಧ್ಯಂತರ ಆದೇಶ ನೀಡಿದ ಪೀಠ, ಅರ್ಜಿ ಸಂಬಂಧ ಸರ್ಕಾರ ಹಾಗೂ ಹಿಂದು ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.