ಬೆಂಗಳೂರು: ‘ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಹೊರಡಿಸಲಾಗಿರುವ ಆದೇಶದಲ್ಲಿ ಯಾವುದೇ ಕಾನೂನು ಪ್ರಕ್ರಿಯೆಯ ಲೋಪ ಆಗಿಲ್ಲ. ಸೌಜನ್ಯ ಚಳವಳಿ ಹೆಸರಲ್ಲಿಅವರು ಏನು ಮಾಡುತ್ತಿದ್ದಾರೆ ಎಂಬುದು ಸಾರ್ವಜನಿಕರಿಗೆ ಗೊತ್ತಿದೆ’ ಎಂದು ಅಡ್ವೊಕೇಟ್ ಜನರಲ್ ಹೈಕೋರ್ಟ್ಗೆ ಸ್ಪಷ್ಟಪಡಿಸಿದರು.
ತಮ್ಮನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ತಿಮರೋಡಿ ಪರ ಪದಾಂಕಿತ ಹಿರಿಯ ವಕೀಲ ತಾರಾನಾಥ ಪೂಜಾರಿ ‘ನಮ್ಮ ಅರ್ಜಿದಾರರ ವಿರುದ್ಧ ಹೊರಡಿಸಲಾಗಿರುವ ಆದೇಶದಲ್ಲಿ ವ್ಯಾಪಕ ಕಾನೂನು ಪ್ರಕ್ರಿಯೆಯ ಲೋಪಗಳಿವೆ’ ಎಂದು ಆರೋಪಿಸಿದರು.
‘ರಾಜ್ಯ ಸರ್ಕಾರ ಮತ್ತು ಗೃಹ ಇಲಾಖೆ ತಿಮರೋಡಿ ವಿರುದ್ಧದ ಭಾವನೆ ಹೊಂದಿದೆ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ ಎಂಬುದರ ಕುರಿತಾದ ಯಾವುದೇ ವಿವರಗಳನ್ನು ಸಮರ್ಪಕವಾಗಿ ಒದಗಿಸಿಲ್ಲ. ಈಗಾಗಲೇ ಸುಮಾರು 10 ಪ್ರಕರಣಗಳಲ್ಲಿ ಅವರ ವಿರುದ್ಧ ತನಿಖಾಧಿಕಾರಿಗಳು ಬಿ ಅಂತಿಮ ವರದಿ ಸಲ್ಲಿಸಿದ್ದಾರೆ. ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೊಂಬಿ ಮಾಡಿ ಗಲಾಟೆ ನಡೆಸುವ ಸಾಧ್ಯತೆ ಇರುತ್ತದೆ ಎಂದಿದ್ದಾರೆ. ಆದರೆ ಇದಕ್ಕೆ ಸಾಕ್ಷಿಗಳೇ ಇಲ್ಲ’ ಎಂದು ಆಕ್ಷೇಪಿಸಿದರು.
ಇದನ್ನು ಬಲವಾಗಿ ಅಲ್ಲಗಳೆದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ‘ಅರ್ಜಿದಾರರ ಪರ ವಕೀಲರು ನ್ಯಾಯಾಲಯಕ್ಕೆ ಹೇಳುತ್ತಿರುವ ವಿವರಗಳು ಸರಿಯಲ್ಲ. ಸ್ಥಳೀಯ ನಿವಾಸಿಯಾಗಿರುವ ಮಹೇಶ್ ಶೆಟ್ಟಿ ತಿಮರೋಡಿ ಸೌಜನ್ಯ ಚಳವಳಿ ಹೆಸರಲ್ಲಿ ಏನು ಮಾಡುತ್ತಿದ್ದಾರೆ ಎಂಬುದು ಸಾರ್ವಜನಿಕರಿಗೆ ಗೊತ್ತಿದೆ. ಸರ್ಕಾರ ಸಹಜ ನ್ಯಾಯ ತತ್ವಕ್ಕೆ ವಿರುದ್ಧವಾಗಿ ನಡೆದುಕೊಂಡಿಲ್ಲ’ ಎಂದು ವಿವರಿಸಿದರು.
ಸುದೀರ್ಘ ವಾದ–ಪ್ರತಿವಾದಿ ಆಲಿಸಿದ ನ್ಯಾಯಪೀಠ ಆದೇಶ ಕಾಯ್ದಿರಿಸಿರುವುದಾಗಿ ತಿಳಿಸಿತು. ಅಂತೆಯೇ ಗಡಿಪಾರು ಆದೇಶಕ್ಕೆ ಸಂಬಂಧಿಸಿದಂತೆ ತಿಮರೋಡಿ ವಿರುದ್ಧ ಆತುರದ ಕ್ರಮ ಜರುಗಿಸದಂತೆ ಈ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.