ಮೈಸೂರು: ಮಾನವ ಕಳ್ಳಸಾಗಣೆ, ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಹೆಣ್ಣು ಮಕ್ಕಳಿಗೆ ರಾಜ್ಯದ ಆರು ವಿಶ್ವವಿದ್ಯಾಲಯಗಳಲ್ಲಿ ಮೀಸಲಾತಿ ಸೌಲಭ್ಯ ನೀಡಲಾಗುತ್ತಿದೆ. ಇದನ್ನು ಎಲ್ಲ ವಿಶ್ವವಿದ್ಯಾಲಯಗಳಿಗೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಇಲ್ಲಿ ಶನಿವಾರ ತಿಳಿಸಿದರು.
‘ಒಡನಾಡಿ’ ಸಂಸ್ಥೆ ಆಯೋಜಿಸಿದ್ದ ‘ಮಹಿಳಾ ಸಾಧಕರ ಸಮಾವೇಶ ಹಾಗೂ ಸತ್ಪುರುಷರ ಆಂದೋಲನ’ದಲ್ಲಿ ಮಾತನಾಡಿ, ‘ಶೋಷಿತ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಬೇಕಾದ ಸೌಲಭ್ಯಗಳನ್ನು ಕಲ್ಪಿಸಲು ಸಿದ್ಧನಿದ್ದೇನೆ’ ಎಂದರು.
‘ಒಡನಾಡಿ ಹೋರಾಟದ ಫಲವಾಗಿ, ಮಾನವ ಕಳ್ಳಸಾಗಣೆ, ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಹೆಣ್ಣು ಮಕ್ಕಳಿಗೆ 6 ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ಅದನ್ನು ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಿಗೂ ವಿಸ್ತರಿಸಬೇಕು. ಹಾಗೆ ಮಾಡಿದರೆ, ವಿಶ್ವದಲ್ಲೇ ಮಾದರಿ ಕಾರ್ಯಕ್ರಮ ಆಗಲಿದೆ’ ಎಂದು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಮನವಿ ಮಾಡಿದರು.
‘ಸಂಸ್ಥೆ ರಕ್ಷಣೆ ಮಾಡಿರುವ ಮಕ್ಕಳು ಶಿಕ್ಷಣದಲ್ಲಿ ಮುಂದಿದ್ದಾರೆ. ಅವರಿಗೆ ಶುಲ್ಕದಲ್ಲಿ ರಿಯಾಯಿತಿ, ವಿದ್ಯಾರ್ಥಿ ವೇತನ, ಮೀಸಲಾತಿ ನೀಡಬೇಕು’ ಎಂದು ಕೋರಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.