ಬೆಂಗಳೂರು: ‘ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳಲ್ಲಿ ನಿತ್ಯ ಕನಿಷ್ಠ ಒಂದು ಗಂಟೆ ಅವಧಿಯನ್ನು ವಿದ್ಯಾರ್ಥಿಗಳ ದೈಹಿಕ ಶಿಕ್ಷಣಕ್ಕೆ ಕಡ್ಡಾಯವಾಗಿ ಮೀಸಲಿಡಬೇಕು. ಖಾಲಿ ಇರುವ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ ಭರ್ತಿ ಮಾಡಬೇಕು’ ಎಂದುಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ ಪತ್ರ ಬರೆದಿದ್ದಾರೆ.
‘ಕ್ರೀಡಾಂ ಗಣ, ಕ್ರೀಡಾ ಸೌಲಭ್ಯ ಇದ್ದ ಮಾತ್ರಕ್ಕೆ ಸಾಧನೆ ಆಗಲಾರದು. ವಿದ್ಯಾರ್ಥಿ ದೆಸೆಯಲ್ಲೇ ಕ್ರೀಡೆಯ ತರಬೇತಿ ನೀಡಬೇಕು. ಆಸಕ್ತಿ ಇರುವ ಸಮರ್ಥ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಮುಂದುವರಿಯು
ತ್ತಾರೆ. ಪ್ರಾಥಮಿಕ ಮತ್ತು ಪ್ರೌಢಶಾಲೆ ಹಂತದಲ್ಲೇ ವ್ಯಾಯಾಮ, ಕ್ರೀಡೆ ಬಗ್ಗೆ ಸೂಕ್ತ ತರಬೇತಿ ನೀಡುವ ಪ್ರಕ್ರಿಯೆ ಆರಂಭವಾಗಬೇಕು’ ಎಂದು ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.
‘ರಾಜ್ಯದಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 39,308 ದೈಹಿಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಇದರಿಂದ ಬೆಳೆವ ಸಿರಿ ಮೊಳಕೆಯಲ್ಲೇ ಚಿವುಟಿದಂತೆ ಆಗುತ್ತಿದೆ. ಮುಂದಿನ ಒಲಿಂಪಿಕ್ಸ್ಗೆ ರಾಜ್ಯದಿಂದ 100 ಕ್ರೀಡಾಪಟುಗಳನ್ನು ಕಳುಹಿಸುವ ಗುರಿ ಹೊಂದಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕ್ರೀಡಾಪಟುಗಳನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಕಳುಹಿಸಬೇಕೆಂದರೆ ಈಗಿನಿಂದಲೇ ಸಿದ್ಧತೆ ಆಗಬೇಕು’ ಎಂದೂ ಅವರು ಹೇಳಿದ್ದಾರೆ.
‘ಎಲ್ಲ ಶಾಲಾ ಕಾಲೇಜುಗಳಲ್ಲಿ ನಿತ್ಯ ಒಂದು ಗಂಟೆ ಅವಧಿ ವಿದ್ಯಾರ್ಥಿಗಳ ದೈಹಿಕ ಶಿಕ್ಷಣಕ್ಕೆ ಈ ಹಿಂದೆ ಮೀಸಲಿಡಲಾಗುತ್ತಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಈ ಪದ್ಧತಿ ಕೈಬಿಟ್ಟಿರುವುದು, ಕ್ರಮೇಣವಾಗಿ ಕಡಿಮೆ ಮಾಡು ತ್ತಿರುವುದು ವಿಷಾದದ ಸಂಗತಿ. ವಿದ್ಯಾರ್ಥಿಗಳ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಕೂಡಾ ಮುಖ್ಯ’ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.