ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗಾಗಿ ‘ಒಂದು ವ್ಯಕ್ತಿ, ಒಂದು ಹುದ್ದೆ‘ ನಿಯಮವನ್ನು ಕಾಂಗ್ರೆಸ್ ಮುರಿಯಲಿದೆ ಎಂದು ಮೂಲಗಳು ತಿಳಿಸಿದ್ದಾಗಿ ಎನ್ಡಿಟಿವಿ ವರದಿ ಮಾಡಿದೆ.
ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಅವರು, ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲೋಸುಗ ರಾಜೀನಾಮೆ ನೀಡಿದ್ದರು. ಇದೀಗ ಮತ್ತೆ ಅವರೇ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ ಮುಂದುವರಿಯಲಿದ್ದಾರೆ ಎಂದು ಗೊತ್ತಾಗಿದೆ.
ಈ ಹಿಂದೆ ಕಾಂಗ್ರೆಸ್ ಒಬ್ಬ ವ್ಯಕ್ತಿ ಒಂದು ಹುದ್ದೆ ನಿಯಮ ರೂಪಿಸಿತ್ತು.
ಶನಿವಾರ ನಡೆಯಲಿರುವಕಾಂಗ್ರೆಸ್ ಸಂಸದೀಯ ಪಕ್ಷದ ತಂತ್ರಗಾರಿಕೆ ಗುಂಪಿನ ಸಭೆಗೆ ರಾಜ್ಯಸಭೆ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್ ಹಾಗೂ ಕೆ.ಸಿ ವೇಣುಗೋಪಾಲ್ ಅವರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ವಿರೋಧ ಪಕ್ಷದ ನಾಯಕ ಸ್ಥಾನದ ಆಕಾಂಕ್ಷಿಗಳಾಗಿದ್ದ ದಿಗ್ವಿಜಯ ಸಿಂಗ್ ಹಾಗೂ ಪಿ. ಚಿದಂಬರಂ ಅವರಿಗೆ ಅಹ್ವಾನ ನೀಡಿಲ್ಲಈ ಸಭೆಯಲ್ಲಿ ಖರ್ಗೆ ಅವರನ್ನೇ ಮುಂದುವರಿಸುವ ಬಗ್ಗೆ ಚರ್ಚೆಗಳು ನಡೆಯಲಿವೆಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಕೂಡ ಒಬ್ಬ ವ್ಯಕ್ತಿ ಒಂದು ಹುದ್ದೆ ನಿಯಮ ವಿಧಿಸಿ ಸ್ಪರ್ಧೆಗೆ ನಿರಾಕರಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.