ಅಪಘಾತದಲ್ಲಿ ಹಾನಿಯಾಗಿರುವ ಕಂಟೈನರ್
– ಪ್ರಜಾವಾಣಿ ಚಿತ್ರ
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಗುರುವಾರ ನಸುಕಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಲ್ಲಿಯವರೆಗೆ ಐವರ ಮೃತದೇಹಗಳು ಪತ್ತೆಯಾಗಿವೆ. 6 ಮಂದಿ ನಾಪತ್ತೆಯಾಗಿದ್ದು 21 ಮಂದಿ ಗಾಯಗೊಂಡಿದ್ದಾರೆ.
ಕ್ಯಾಂಟರ್ ಡಿಕ್ಕಿ ಹೊಡೆದ ರಭಸಕ್ಕೆ ಸೀಬರ್ಡ್ ಸ್ಲೀಪರ್ (ನಾನ್ ಎಸಿ)- ಬಸ್ ಸುಟ್ಟು ಕರಕಲಾಗಿದೆ. ಸಜೀವವಾಗಿ ದಹನಗೊಂಡ ಐವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಹರಿಯಾಣ ನೋಂದಣಿಯ ಕ್ಯಾಂಟರ್ ಚಾಲಕ ಕೂಡ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಬಂದಿರುವ ವಿಧಿ ವಿಜ್ಞಾನ ಪ್ರಯೋಗಾಲಯ, ಬೆರಳಚ್ಚು ತಜ್ಞರು ಬಸ್ ನಲ್ಲಿ ಸುಟ್ಟು ಹೋದ ವಸ್ತುಗಳನ್ನು ಸಂಗ್ರಹಿಸಿದ್ದಾರೆ. ಡಿಎನ್ ಎ ಪರೀಕ್ಷೆಯ ನಂತರ ಮೃತಪಟ್ಟವರ ಸಂಖ್ಯೆ ಹಾಗೂ ಗುರುತು ಪತ್ತೆಯಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಹಲವರು ಜಿಗಿದು ಪ್ರಾಣ ರಕ್ಷಣೆ ಮಾಡಿಕೊಂಡಿದ್ದಾರೆ.
ಬೆಂಕಿ ಹೊತ್ತಿ ಉರಿಯುತ್ತಿದ್ದ ಕಾರಣ ಸ್ಥಳೀಯರು ಬಸ್ ಬಳಿ ತೆರಳಿ ರಕ್ಷಣೆ ಮಾಡಲು ಸಾಧ್ಯವಾಗಿಲ್ಲ. ಘಟನೆ ನಡೆದ 20 ನಿಮಿಷದಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿದರು.
ಹಿರಿಯೂರು ತಾಲ್ಲೂಕು ಆಸ್ಪತ್ರೆಯಲ್ಲಿ 11, ತುಮಕೂರು ಜಿಲ್ಲೆ, ಶಿರಾ ಆಸ್ಪತ್ರೆಯಲ್ಲಿ 8, ಚಿತ್ರದುರ್ಗ ಬಸವೇಶ್ವರ ಆಸ್ಪತ್ರೆಯಲ್ಲಿ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಸ್ ಚಾಲಕ ರಫೀಕ್, ಕ್ಲೀನರ್ ಮೊಹಮ್ಮದ್ ಸಾದಿಕ್ ಹಿರಿಯೂರು ಆಸ್ಪತ್ರೆಯಲ್ಲಿ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.