ಬೆಂಗಳೂರು: ಕೊರೊನಾ ವೈರಸ್ (ಕೋವಿಡ್–19) ವಿರುದ್ಧದ ಹೋರಾಟದಲ್ಲಿ ಮಾಸ್ಕ್ ಬಳಕೆಯ ಅನಿವಾರ್ಯತೆಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಕರ್ನಾಟಕದಾದ್ಯಂತ ಇಂದು ‘ಮಾಸ್ಕ್ ದಿವಸ’ ಆಚರಿಸಲಾಗುತ್ತಿದೆ.ರಾಜ್ಯದ ಪ್ರತಿ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಮಾಸ್ಕ್ ದಿನ ಆಚರಣೆಯಾಗುತ್ತಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬೆಂಗಳೂರಿನ ವಿಧಾನಸೌಧ ಬಳಿಯ ಅಂಬೇಡ್ಕರ್ ಪ್ರತಿಮೆ ಎದುರು ಇದಕ್ಕೆ ಚಾಲನೆ ನೀಡಿದ್ದಾರೆ.ಮಾಸ್ಕ ದಿನ ಆಚರಿಸುವ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರವೇ ಮಾಧ್ಯಮಗಳಿಗೆ ತಿಳಿಸಿದ್ದರು. ‘ಮಾಸ್ಕ್ ಧರಿಸುವ ಅಗತ್ಯದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯದಲ್ಲಿ ‘ಮಾಸ್ಕ್ ದಿನ’ ಆಚರಿಸಲು ನಿರ್ಧರಿಸಲಾಗಿದೆ. ಯಾರು ಮಾಸ್ಕ್ ಧರಿಸುವುದಿಲ್ಲವೋ ಅವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು. ಅವರಿಗೆ ₹200 ದಂಡ ವಿಧಿಸಲಾಗುವುದು,’ ಎಂದು ತಿಳಿಸಿದ್ದರು.