ADVERTISEMENT

ಮಸ್ಕಿ, ಬಸವಕಲ್ಯಾಣ, ಸಿಂದಗಿ ಉಪ‌ ಚುನಾವಣೆಯಲ್ಲಿ ಜೆಡಿಎಸ್‌ ಸ್ಪರ್ಧೆ: ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2021, 10:32 IST
Last Updated 14 ಫೆಬ್ರುವರಿ 2021, 10:32 IST
ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ   

ಬೆಂಗಳೂರು: ಮಸ್ಕಿ, ಬಸವಕಲ್ಯಾಣ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಪ್ರಕಟಿಸಿದರು.

ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಅವರು, ' ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ಬೇಡ ಎಂಬ ನಿರ್ಧಾರ ಕೈಗೊಳ್ಳಲಾಗಿತ್ತು. ಪಕ್ಷಕ್ಕೆ ಆರ್ಥಿಕ ಶಕ್ತಿ ಇಲ್ಲದ ಕಾರಣದಿಂದ ಈ ತೀರ್ಮಾನಕ್ಕೆ ಬರಲಾಗಿತ್ತು. ಅದನ್ನೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.‌ದೇವೇಗೌಡ ಅವರು ಪ್ರಕಟಿಸಿದ್ದರು. ಆದರೆ, ಈಗ ಮೂರು ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದ್ದೇನೆ' ಎಂದರು.

ಸ್ಪರ್ಧೆಯಿಂದ ಜೆಡಿಎಸ್ ದೂರ ಉಳಿಯಲಿದೆ ಎಂದಾಗ ಕೆಲವರು ಟೀಕಿಸಿದ್ದರು. ಬಿಜೆಪಿಗೆ ಅನುಕೂಲ ಮಾಡಿಕೊಡಲು ಜೆಡಿಎಸ್ ಪಕ್ಷ ಮುಂದಾಗಿದೆ ಎಂದು ಆರೋಪ ಮಾಡಿದರು. ಅಂತಹ ಯಾವ ಯೋಚನೆಯೂ ತಮ್ಮ ಪಕ್ಷಕ್ಕಿಲ್ಲ ಎಂದು ಹೇಳಿದರು.

ADVERTISEMENT

ಮುಂಬರುವ ವಿಧಾನಸಭಾ ಚುನಾವಣೆಯಲ್ಲೂ ಯಾವುದೇ ರಾಷ್ಟ್ರೀಯ ಪಕ್ಷಗಳ ಜತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವುದಿಲ್ಲ. 224 ಕ್ಷೇತ್ರಗಳಲ್ಲೂ ಸ್ವತಂತ್ರವಾಗಿ ಸ್ಪರ್ಧೆ ಮಾಡಲಾಗುವುದು ಎಂದರು.

ಪಕ್ಷದ‌ ಎಲ್ಲ ಹಂತದ ಪದಾಧಿಕಾರಿಗಳನ್ನು ಪಾರದರ್ಶಕವಾಗಿ ನೇಮಕ ಮಾಡಲಾಗುವುದು. ಹಣವಂತರಿಗಿಂತಲೂ ನಿಷ್ಠೆ ಇರುವವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.