ADVERTISEMENT

ಕುಮಾರಸ್ವಾಮಿ ಸರ್ಕಾರ ಪತನಕ್ಕೆ ಮಾಧ್ಯಮ ಕಾರಣ: ದೇವೇಗೌಡ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2020, 16:04 IST
Last Updated 20 ಸೆಪ್ಟೆಂಬರ್ 2020, 16:04 IST
ಎಚ್‌.ಡಿ.ದೇವೇಗೌಡ
ಎಚ್‌.ಡಿ.ದೇವೇಗೌಡ   

ನವದೆಹಲಿ: ‘ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಾಧ್ಯಮಗಳು ಅವರ ವಿರುದ್ಧ ನಿರಂತರವಾದ ಅಪಪ್ರಚಾರದ ಅಭಿಯಾನ ನಡೆಸಿದ್ದವು’ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಆರೋಪಿಸಿದ್ದಾರೆ.

‘ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ, ಮಾಧ್ಯಮಗಳು ಸರ್ಕಾರಕ್ಕೆ ಸಹಕಾರ ನೀಡಿಲ್ಲ. ಮಾಧ್ಯಮಗಳು ಸರ್ಕಾರದ ವಿರುದ್ಧವೇ ಅಭಿಯಾನ ನಡೆಸಿದವು. ಅವರು ಎಚ್‌.ಡಿ.ರೇವಣ್ಣ ಅವರನ್ನು ಸೂಪರ್‌ ಸಿ.ಎಂ ಎಂದು ಕರೆದರು’ ಎಂದು ವರದಿಗಾರರಿಗೆ ದೇವೇಗೌಡ ತಿಳಿಸಿದರು.

‘ಕುಮಾರಸ್ವಾಮಿ ಅವರು ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿಯಾದ ಸಂದರ್ಭದಲ್ಲೂ, ಅದಕ್ಕೆ ಹಲವು ರಾಜಕೀಯ ಬಣ್ಣಗಳನ್ನು ಹಚ್ಚಲಾಯಿತು. ಈ ವರದಿಗಳ ಕುರಿತು ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ’ ಎಂದರು.

ADVERTISEMENT

‘ಕೆಲವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ ಅವರನ್ನು ಸೂಪರ್‌ ಸಿ.ಎಂ ಎಂದು ಕರೆದರೂ, ನಾನು ಏನೂ ಹೇಳುತ್ತಿಲ್ಲ. ಬಿಜೆಪಿಯಲ್ಲಿ ವಿಜಯೇಂದ್ರ ಅವರು ಮತ್ತಷ್ಟು ಸಕ್ರಿಯರಾಗಿರುವುದು, ಕೆಲ ಬಿಜೆಪಿ ನಾಯಕರಿಗೆ ಸಹಿಸಲಾಗುತ್ತಿಲ್ಲ ಎಂದೆನಿಸುತ್ತಿದೆ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮುಂದುವರಿಯಲು ಬಿಜೆಪಿ ನಾಯಕರು ಬಿಟ್ಟರೆ, ಅವರದೇ ನಿವೃತ್ತಿ ವರ್ಷದ ನಿಯಮವನ್ನು ಉಲ್ಲಂಘಿಸಿದಂತಾಗುತ್ತದೆ. ಹೀಗಾದರೆ ಪಕ್ಷದೊಳಗೇ ಯಡಿಯೂರಪ್ಪ ಅವರು ಸಮಸ್ಯೆ ಎದುರಿಸಬಹುದು’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಪಕ್ಷ ಅಭ್ಯರ್ಥಿಯನ್ನು ನಿಲ್ಲಿಸಲಿದೆ: ಶಿರಾ ಉಪಚುನಾವಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ದೇವೇಗೌಡರು, ‘ಜೆಡಿಎಸ್‌ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಿದೆ. ಇತ್ತೀಚೆಗೆ ಮೃತಪಟ್ಟ ಸತ್ಯನಾರಾಯಣ ಅವರ ಕುಟುಂಬದವರ ಜೊತೆ ಮಾತುಕತೆ ನಡೆಸಲಾಗುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.