ADVERTISEMENT

ಅಗತ್ಯ ಮೂಲಸೌಕರ್ಯ ನಿರ್ವಹಿಸಿ

ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2019, 9:59 IST
Last Updated 11 ಡಿಸೆಂಬರ್ 2019, 9:59 IST
ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಅಗತ್ಯ ಸಹಕಾರ ಒದಗಿಸುವ ಕುರಿತು ಆಯೋಜಿಸಲಾದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ಮಾತನಾಡಿದರು
ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಅಗತ್ಯ ಸಹಕಾರ ಒದಗಿಸುವ ಕುರಿತು ಆಯೋಜಿಸಲಾದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ಮಾತನಾಡಿದರು   

ಕೊಪ್ಪಳ: ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀ ಗವಿಸಿದ್ಧೇಶ್ವರ ಮಠದ ಜಾತ್ರಾ ಮಹೋತ್ಸವವು ಜ 8ರಿಂದ ಆರಂಭವಾಗಲಿದ್ದು, ಜಾತ್ರೆಗೆ ಬರುವಭಕ್ತರಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಸೌಕರ್ಯ ಒದಗಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಸಹಕಾರ ಒದಗಿಸುವ ಕುರಿತು ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಾತ್ರಾ ಮಹೋತ್ಸವದಲ್ಲಿ ಸ್ವಚ್ಛತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು.ನಗರಸಭೆವತಿಯಿಂದ ಎಲ್ಲ ರಸ್ತೆಗಳಲ್ಲಿ ಸ್ವಚ್ಛತೆ, ಧೂಳು ನಿಯಂತ್ರಣಕ್ಕೆ ಪರ್ಯಾಯ ವ್ಯವಸ್ಥೆ. ತಾತ್ಕಾಲಿಕವಾಗಿ ಪ್ರತ್ಯೇಕ ಶೌಚಾಲಯ ಕುಡಿಯುವ ನೀರು ಪೂರೈಸಬೇಕು. ಭದ್ರತೆಯ ಹಿತದೃಷ್ಠಿಯಿಂದ ಪೊಲೀಸ್ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಬೇಕು. ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು. ಅಗ್ನಿ ಶಾಮಕ ದಳದವರು ಅಗ್ನಿ ಶಾಮಕ ವಾಹನವನ್ನು ಸ್ಥಳದಲ್ಲಿಯೇ ಕಾಯ್ದಿರಿಸಬೇಕು. ಜೆಸ್ಕಾಂತುರ್ತು ಸೇವೆಗೆ ಸದಾ ಸಿದ್ಧರಿರಬೇಕು ಎಂದು ಸೂಚನೆ ನೀಡಿದರು.

ADVERTISEMENT

ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ ಮಾತನಾಡಿ, ಪ್ರಸಾದ ವಿತರಣೆ ಪೂರ್ವದಲ್ಲಿ ಆಹಾರವನ್ನು ಪರಿಶೀಲಿಸುವುದು ಅತ್ಯವಶ್ಯ. ಜಿಲ್ಲಾ ಆರೋಗ್ಯ ಅಧಿಕಾರಿ, ಆಹಾರ ಸುರಕ್ಷಾಧಿಕಾರಿ, ಗವಿಮಠದ ಅಡುಗೆ ಸಿಬ್ಬಂದಿಯೊಂದಿಗೆ ವಿಶೇಷ ಸಭೆ ನಡೆಸಿ, ಆಹಾರ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕು. ಪ್ರಸಾದ ವಿತರಣೆ ಪೂರ್ವದಲ್ಲಿ ಆಹಾರ ಸುರಕ್ಷಾ ಅಧಿಕಾರಿಯಿಂದ ಪರಿಶೀಲನೆ ನಡೆದ ನಂತರವೇ ಪ್ರಸಾದ ವಿತರಿಸಬೇಕು ಎಂದು ಸಲಹೆ ನೀಡಿದರು.

ಆಟೋಪಕರಣಗಳ ಪರವಾನಿಗೆ ಪಡೆಯುವ ಮೊದಲು ಸಂಬಂಧಪಟ್ಟ ಇಲಾಖೆಯಿಂದ ಸಲ್ಲಿಸಲಾಗುವ ನಿರಾಕ್ಷೇಪಣಾ ಪತ್ರವನ್ನು ಯಾವುದೇ ವಿಳಂಬಕ್ಕೆ ಆಸ್ಪದ ನೀಡದೇ ಸೂಕ್ತ ಸಮಯದಲ್ಲಿ ಸಲ್ಲಿಸಬೇಕು. ಆಟೋಪಕರಣದಲ್ಲಿ ದುರ್ಘಟನೆ ಸಂಭವಿಸಿದಂತೆ ಎಚ್ಚರ ವಹಿಸಿ. ಪರವಾನಿಗೆ ಪಡೆಯದೇ ಪ್ರಾರಂಭಿಸಿದ ಅಂಗಡಿಗಳ ವಿರುದ್ಧ ಕ್ರಮ ಜರುಗಿಸಬೇಕು. ಜಾತ್ರೆಯಲ್ಲಿ ಹಾಕಲಾಗುವ ಎಲ್ಲ ಅಂಗಡಿಗಳಿಗೆ ನಂಬರಿಂಗ್ ಮಾಡಬೇಕು. ಇದರಿಂದ ಯಾವುದೇ ಅವಘಡ ಸಂಭವಿಸಿದಲ್ಲಿ ತುರ್ತು ಸೇವೆಗಾಗಿ ಅನುಕೂಲವಾಗುವುದು ಎಂದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿದ್ಧರಾಮೇಶ್ವರ, ನಿರ್ಮಿತಿ ಕೇಂದ್ರದ ಶಶಿಧರ ಪಾಟೀಲ, ಡಿಎಚ್‌ಒ ಡಾ. ಲಿಂಗರಾಜು, ತಹಶೀಲ್ದಾರ್ ಜೆ.ಬಿ. ಮಜ್ಗಿ, ನಗರಸಭೆ ಪ್ರಭಾರ ಪೌರಾಯುಕ್ತ ಮಂಜುನಾಥ, ಗವಿಮಠ ಸಂಸ್ಥಾನದಿಂದ ಬಸವರಾಜ ಬಳ್ಳೊಳ್ಳಿ, ಶರಣಬಸಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.