ADVERTISEMENT

ಮೇಕೆದಾಟು: ಜುಲೈ 6ಕ್ಕೆ ‘ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ’ದ ಸಭೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2022, 19:13 IST
Last Updated 21 ಜೂನ್ 2022, 19:13 IST
   

ನವದೆಹಲಿ:ಕೇಂದ್ರ ಸರ್ಕಾರದ ಅಧೀನದಲ್ಲಿರುವ ‘ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ’ದ (ಸಿಡಬ್ಲ್ಯೂಎಂಎ) ಸಭೆ ಜುಲೈ 6ಕ್ಕೆ ಮುಂದೂಡಿಕೆಯಾಗಿದೆ.

ಮೇಕೆದಾಟು ಬಳಿ ಸಮಾನಾಂತರ ಜಲಾಶಯ ನಿರ್ಮಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಸಲ್ಲಿಸಿರುವ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್‌) ಸಿಡಬ್ಲ್ಯೂಎಂಎ ಈವರೆಗೆ ಒಪ್ಪಿಗೆ ನೀಡಿಲ್ಲ. ಆರಂಭದಲ್ಲಿ ಜೂನ್ 17ರಂದು ಸಭೆ ನಿಗದಿಯಾಗಿತ್ತು. ಬಳಿಕ ಜೂನ್ 23ಕ್ಕೆ ಮುಂದೂಡಿಕೆಯಾಗಿತ್ತು. ಅಂದಿನ ಸಭೆಯಲ್ಲಿ ಮೇಕೆದಾಟು ಡಿಪಿಆರ್‌ ಚರ್ಚೆಗೆ ಬರಬೇಕಿತ್ತು. ಸಭೆಯ ಕಾರ್ಯಸೂಚಿ ಪಟ್ಟಿಯಲ್ಲಿ ಈ ವಿಚಾರವನ್ನು ಇಟ್ಟಿದ್ದಕ್ಕೆ ತಮಿಳುನಾಡು ಸರ್ಕಾರ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಸಂಬಂಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ಹೇಳಿತ್ತು.

‘ಮೇಕೆದಾಟು ವಿವಾದ ಸುಪ್ರೀಂ ಕೋರ್ಟ್‌ನಲ್ಲಿ ಇತ್ಯರ್ಥವಾಗಿದ್ದು, ತಮಿಳುನಾಡು ಸರ್ಕಾರ ಅನಗತ್ಯ ವಿವಾದ ಸೃಷ್ಟಿಸುತ್ತಿದೆ’ ಎಂದು ಕರ್ನಾಟಕ ಸರ್ಕಾರ ತಿರುಗೇಟು ನೀಡಿತ್ತು. ಡಿಪಿಆರ್‌ಗೆ ಒಪ್ಪಿಗೆ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೋವಿಂದ ಕಾರಜೋಳ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌ ಅವರಿಗೆ ಕಳೆದ ವಾರ ಮನವಿ ಸಲ್ಲಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.