ADVERTISEMENT

ಮೇಕೆದಾಟು ಯೋಜನೆಗೆ ಹೊಸ ಡಿಪಿಆರ್: ಡಿ.ಕೆ.ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2025, 0:41 IST
Last Updated 19 ನವೆಂಬರ್ 2025, 0:41 IST
<div class="paragraphs"><p>ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌</p></div>

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

   

ಬೆಂಗಳೂರು: ‘ಮೇಕೆದಾಟು ಯೋಜನೆಗೆ ಹೊಸದಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಯೋಜನೆ ಅನುಷ್ಠಾನ ಕುರಿತು ಅಧಿಕಾರಿಗಳ ಸಭೆ ಹಾಗೂ ಕಾವೇರಿ ನೀರಾವರಿ ನಿಗಮದ ನಿರ್ದೇಶಕರ ಮಂಡಳಿ ಸಭೆ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು.

ADVERTISEMENT

‘ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಯೋಜನೆಯನ್ನು ಹೇಗೆ ತೆಗೆದುಕೊಂಡು ಹೋಗಬೇಕು ಎಂಬ ಚರ್ಚೆ ನಡೆಸಿದ್ದೇವೆ. ಯೋಜನೆಯ ಸಂಪೂರ್ಣ ವಿವರ, ಮುಳುಗಡೆಯಾಗುವ ಅರಣ್ಯ ಪ್ರದೇಶವನ್ನು ಡಿಪಿಆರ್ ಒಳಗೊಳ್ಳಲಿದೆ. ಹಿಂದೆ ಸಲ್ಲಿಸಿದ್ದ ಡಿಪಿಆರ್ ಅನ್ನು ಕೇಂದ್ರ ಸರ್ಕಾರ ತಿರಸ್ಕರಿಸಿತ್ತು. ಹಾಗಾಗಿ, ಲೋಪದೋಷಗಳನ್ನು ಸರಿಪಡಿಸಿ ಹೊಸದಾಗಿ ಸಿದ್ಧಪಡಿಸಲಾಗುವುದು. ಕಾನೂನು ಪ್ರಕಾರ ಕೇಂದ್ರ ಜಲ ಆಯೋಗ ಅಥವಾ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮಂಡಿಸಲಾಗುವುದು’ ಎಂದು ಮಾಹಿತಿ ನೀಡಿದರು. 

‘ಯೋಜನಾ ಕಚೇರಿಯನ್ನು ಹಾರೋಬೆಲೆಯಲ್ಲಿ ಆರಂಭಿಸಿದ್ದೇವೆ. ಮುಖ್ಯ ಎಂಜಿನಿಯರ್‌, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಪ್ರತ್ಯೇಕ ಕಚೇರಿಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಆರಂಭಿಸಲು ತೀರ್ಮಾನಿಸಿದ್ದೇವೆ. ಮಂಡ್ಯ ಜಿಲ್ಲೆಗೆ ಹತ್ತಿರದಲ್ಲಿ ಇರಲಿ ಎಂಬ ಉದ್ದೇಶಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಚೇರಿಗಳಿಗೆ ಅಗತ್ಯ ಸಿಬ್ಬಂದಿ ಒದಗಿಸಲಾಗುವುದು’ ಎಂದು ಹೇಳಿದರು.

ಮೇಕೆದಾಟು ಯೋಜನೆ ಕುರಿತ ಸಭೆಯಲ್ಲಿ ಜಲ ಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಹೆಚ್ಚುವರಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ಬೆಂಗಳೂರು ದಕ್ಷಿಣ, ಗ್ರಾಮಾಂತರ, ಮಂಡ್ಯ,  ಚಾಮರಾಜನಗರ ಜಿಲ್ಲಾಧಿಕಾರಿಗಳು ಭಾಗವಹಿಸಿದ್ದರು.

ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಸಮತೋಲನ ಜಲಾಶಯ ನಿರ್ಮಿಸುವ ಕರ್ನಾಟಕದ ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ, ನ್ಯಾಯಮೂರ್ತಿಗಳಾದ ಕೆ. ವಿನೋದ್‌ ಚಂದ್ರನ್‌ ಹಾಗೂ ಎನ್‌.ವಿ. ಅಂಜಾರಿಯಾ ಪೀಠವು, ‘ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಲು ಮಾತ್ರ ಕೇಂದ್ರ ಜಲ ಆಯೋಗ (ಸಿಡಬ್ಲ್ಯುಸಿ) ಅನುಮತಿ ನೀಡಿದೆ. ತಮಿಳುನಾಡಿನ ಆಕ್ಷೇಪಣೆಗಳನ್ನು ತಜ್ಞರು ಪರಿಶೀಲಿಸಿದ ಬಳಿಕವೇ ಈ ಪ್ರಕ್ರಿಯೆ ನಡೆದಿದೆ. ಈ ಹಂತದಲ್ಲಿ ಇದನ್ನು ಪ್ರಶ್ನಿಸಿ ತಮಿಳುನಾಡು ಅರ್ಜಿ ಸಲ್ಲಿಸಿರುವುದು ಅವಧಿಪೂರ್ವ (ಪ್ರಿಮೆಚೂರ್‌)’ ಎಂದು ಅಭಿಪ್ರಾಯಪಟ್ಟಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.