ADVERTISEMENT

ಯಡಿಯೂರಪ್ಪ ವಿರುದ್ಧದ ದೂರು ವಾಪಸ್ ಪಡೆಯಲು ಮೆಮೊ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2020, 21:13 IST
Last Updated 9 ಡಿಸೆಂಬರ್ 2020, 21:13 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಮಠದಹಳ್ಳಿ ಬಡಾವಣೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವಶಪಡಿಸಿಕೊಂಡಿದ್ದ ಜಮೀನು ಡಿ–ನೋಟಿಫಿಕೇಷನ್ ಮಾಡಿದ್ದ ಆರೋಪದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಿಸಿರುವ ದೂರು ಹಿಂಪಡೆಯಲಾಗುವುದು ಎಂದು ಹೈಕೋರ್ಟ್‌ಗೆ ದೂರುದಾರರು ಮೊಮೊ ಸಲ್ಲಿಸಿದರು.

1 ಎಕರೆ 10 ಗುಂಟೆ ಜಮೀನು ಡಿನೋಟಿಫಿಕೇಷನ್ ಸಂಬಂಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ರದ್ದುಪಡಿಸುವಂತೆ 2017ರಲ್ಲಿ ಯಡಿಯೂರಪ್ಪ ಸಲ್ಲಿಸಿದ್ದ ತಕರಾರು ಅರ್ಜಿ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.

ದೂರುದಾರ ಜಯಕುಮಾರ್ ಹಿರೇಮಠ್ ಪರ ವಕೀಲರು ಹಾಜರಾಗಿ, ಲೋಕಾಯುಕ್ತ ಪೊಲೀಸರಿಗೆ ದೂರು ದಾಖಲಿಸುವ ಮುನ್ನ ಪೂವಾನುಮತಿ ಪಡೆದಿಲ್ಲ. ಹೀಗಾಗಿ, ದೂರು ಹಿಂಪಡೆಯಲು ಅನುಮತಿ ನೀಡುವಂತೆ ಕೋರಿ ಮೆಮೊ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ‘ಡಿ.11ರಂದು ದೂರುದಾರರು ಖುದ್ದು ಹಾಜರಾಗಿ ಈ ಕುರಿತು ವಿವರಣೆ ನೀಡಬೇಕು’ ಎಂದು ಅಭಿಪ್ರಾಯಪಟ್ಟಿತು.

ADVERTISEMENT

ಗಂಗೇನಹಳ್ಳಿ ವ್ಯಾಪ್ತಿಯ ಮಠದಹಳ್ಳಿ ಬಡಾವಣೆಯನ್ನು 1977ರಲ್ಲಿ ಬಿಡಿಎ ಅಭಿವೃದ್ಧಿಪಡಿಸಿತ್ತು. 2010ರಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ, ಡಿ–ನೋಟಿಫೈ ಮಾಡಿದ್ದಾರೆ ಎಂದು ಜಯಕುಮಾರ್ ಹಿರೇಮಠ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.