ADVERTISEMENT

ಮೈಕ್ರೊ ಫೈನಾನ್ಸ್‌ ಕಿರುಕುಳ: ರಾಜ್ಯಪಾಲರ ಅಂಗಳಕ್ಕೆ ‘ಸುಗ್ರೀವಾಜ್ಞೆ’

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2025, 23:55 IST
Last Updated 3 ಫೆಬ್ರುವರಿ 2025, 23:55 IST
 ರಾಜ್ಯಪಾಲ ಥಾವರಚಂದ್‌ ಗೆಹಲೋತ್‌
ರಾಜ್ಯಪಾಲ ಥಾವರಚಂದ್‌ ಗೆಹಲೋತ್‌   

ಬೆಂಗಳೂರು: ಮೈಕ್ರೊ ಫೈನಾನ್ಸ್‌ ಕಂಪನಿಗಳು ಮತ್ತು ಲೇವಾದೇವಿದಾರರು ನೀಡುತ್ತಿರುವ ಕಿರುಕುಳದಿಂದ ಸಾಲಗಾರರನ್ನು ರಕ್ಷಿಸುವ ಉದ್ದೇಶದಿಂದ ರೂಪಿಸಿದ ‘ಕರ್ನಾಟಕ ಮೈಕ್ರೊ ಫೈನಾನ್ಸ್‌ (ಬಲವಂತದ ಕ್ರಮಗಳ ತಡೆ) ಸುಗ್ರೀವಾಜ್ಞೆ–2025’ ಅನ್ನು ಅಂಕಿತಕ್ಕಾಗಿ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರಿಗೆ ಕಳುಹಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ಇಲಾಖೆಯ ಕಾರ್ಯದರ್ಶಿ ಜಿ. ಶ್ರೀಧರ್‌ ತಿಳಿಸಿದರು.

10 ವರ್ಷ ಜೈಲು: ‘ಸಾಲಗಾರರಿಗೆ ಹಿಂಸೆ, ಕಿರುಕುಳ ನೀಡುವ ಮೈಕ್ರೊ ಫೈನಾನ್ಸ್‌ ಕಂಪನಿಗಳು ಅಥವಾ ಲೇವಾದೇವಿದಾರರಿಗೆ ಆರು ತಿಂಗಳುಗಳಿಗಿಂತ ಕಡಿಮೆ ಇಲ್ಲದ, 10 ವರ್ಷದವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಮತ್ತು ₹5 ಲಕ್ಷದವರೆಗೆ ವಿಸ್ತರಿಸಬಹುದಾದ ದಂಡ ವಿಧಿಸಲು ಸುಗ್ರೀವಾಜ್ಞೆಯಲ್ಲಿ ಅವಕಾಶ ಕಲ್ಪಿಸಲಾಗಿದೆ’ ಎಂದೂ ಅವರು ತಿಳಿಸಿದರು.

‘ಸುಗ್ರೀವಾಜ್ಞೆಯ ಕರಡಿನಲ್ಲಿ 3 ವರ್ಷ ಜೈಲು ಶಿಕ್ಷೆ ಎಂದು ಉಲ್ಲೇಖಿಸಲಾಗಿತ್ತು. ಆದರೆ, ಕಾನೂನು ಇನ್ನಷ್ಟು ಬಿಗಿಗೊಳಿಸುವ ಉದ್ದೇಶದಿಂದ ಜೈಲು ಶಿಕ್ಷೆಯ ಪ್ರಮಾಣವನ್ನು 10 ವರ್ಷದವರೆಗೆ ವಿಸ್ತರಿಸಲು ಅವಕಾಶ ಕಲ್ಪಿಸಲಾಗಿದೆ. ಮೈಕ್ರೊ ಫೈನಾನ್ಸ್‌ ಕಂಪನಿಗಳು ಮತ್ತು ಲೇವಾದೇವಿದಾರರ ನೋಂದಣಿ ಕಡ್ಡಾಯ ಸೇರಿದಂತೆ ಇತರ ಎಲ್ಲ ಅಂಶಗಳು ಸುಗ್ರೀವಾಜ್ಞೆಯಲ್ಲಿದೆ’ ಎಂದೂ ಅವರು ವಿವರಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.