ADVERTISEMENT

ವಲಸೆ ಕಾರ್ಮಿಕರಿಗೆ ಆಹಾರ ಧಾನ್ಯ ವಿತರಿಸಲು ರಾಜ್ಯ ಸರ್ಕಾರ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 18 ಮೇ 2020, 13:06 IST
Last Updated 18 ಮೇ 2020, 13:06 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ನಾಲ್ಕನೇ ಹಂತದ ಲಾಕ್‌ಡೌನ್ ಜಾರಿಯಾದ ಬೆನ್ನಲ್ಲೇ ಆಹಾರ ಇಲಾಖೆ ವಲಸೆ ಕಾರ್ಮಿಕರಿಗೆ ಸಿಹಿ ಸುದ್ದಿ ನೀಡಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಪ್ಯಾಕೇಜ್ -2 ಬಿಡುಗಡೆ ಮಾಡಿದ್ದು ವಲಸೆ ಕಾರ್ಮಿಕರಿಗೆ ಮೇ ಮತ್ತು ಜೂನ್ ನಲ್ಲಿ ಆಹಾರ ಧಾನ್ಯಗಳನ್ನು ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ವಲಸೆ ಕಾರ್ಮಿಕರಿಗೆ ಇದೇ 26 ರಿಂದ 31ರವರೆಗೆ ಪ್ರತಿ ವ್ಯಕ್ತಿಗೆ 5 ಕೆ.ಜಿ ಅಕ್ಕಿ ಉಚಿತವಾಗಿ ನೀಡಲು ನಿರ್ಧರಿಸಿದ್ದು, ಮುಂದಿನ ತಿಂಗಳು ಜೂನ್ 1 ರಿಂದ 10 ರವರೆಗೆ ಪ್ರತಿ ವ್ಯಕ್ತಿಗೆ 5 ಕೆ.ಜಿ ಅಕ್ಕಿ ಮತ್ತು ಪ್ರತಿ ಕುಟುಂಬಕ್ಕೆ 2 ಕೆ.ಜಿ ಕಡಲೆಕಾಳು ಉಚಿತವಾಗಿ ನೀಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕರ ಸರಬರಾಜು ಸಚಿವ ಕೆ. ಗೋಪಾಲಯ್ಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಪ್ಯಾಕೇಜ್ 2ರ ಸಂಪೂರ್ಣ ವೆಚ್ಚ ಕೇಂದ್ರ ಸರ್ಕಾರ ವಹಿಸಿಕೊಂಡಿದೆ. ಇದಕ್ಕೆ 40,193 ಮೆಟ್ರಿಕ್ ಟನ್ ಅಕ್ಕಿ ಹಾಗೂ 2,544 ಟನ್ ಕಡಲೆಕಾಳು ಅವಶ್ಯಕತೆಯಿದೆ. ಇದರಲ್ಲಿ ಕಡಿಮೆ ಬಿದ್ದರೆ, ಕೇಂದ್ರದಿಂದ ಕಳಿಸಿಕೊಡಲಾಗುತ್ತದೆ ಕೇಂದ್ರ ಸಚಿವರು ತಿಳಿಸಿದ್ದಾರೆ ಎಂದು ಗೋಪಾಲಯ್ಯ ಹೇಳಿದರು.

ADVERTISEMENT

ವಲಸೆ ಕಾರ್ಮಿಕರನ್ನು ಗುರುತಿಸುವ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿದ್ದು, ನಮ್ಮ ರಾಜ್ಯದಲ್ಲಿ 40.19 ಲಕ್ಷ ವಲಸೆ ಕಾರ್ಮಿಕರಿದ್ದಾರೆ. ಅವರೆಲ್ಲರು ಈ ಪ್ಯಾಕೇಜ್ 2ರ ಪ್ರಯೋಜನವನ್ನು ಪಡೆದುಕೊಳ್ಳಲಿದ್ದಾರೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್‌ ಅನ್ನ ಯೋಜನೆಯ ಪ್ಯಾಕೇಜ್‌ -2 ರ ಪ್ರಯೋಜನವನ್ನು ಪಡೆದುಕೊಳ್ಳಲು ವಲಸೆ ಕಾರ್ಮಿಕರಲ್ಲಿ ಈ ಕೆಳಕಂಡ ಮಾನದಂಡಗಳನ್ನು ವಿಧಿಸಲಾಗಿದೆ.

* ವಲಸೆ ಕಾರ್ಮಿಕರು ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಬಂದವರಾಗಿರಬೇಕು

* ಇವರು ಯಾವುದೇ ಅಂತ್ಯೋದಯ / ಬಿ,ಪಿ,ಎಲ್/ ಎ,ಪಿ,ಎಲ್/ ಕಾರ್ಡ್ ಹೊಂದಿರಬಾರದು

* ಸ್ವಂತ ಮನೆ ಹೊಂದಿರಬಾರದು ಹಾಗೂ ಆದಾಯ ತೆರಿಗೆ ಪಾವತಿದಾರರಾಗಿರಬಾರದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.