ಮಂಗಳೂರು: ಸೇನೆಗೆ ಸೇರುವ ರಾಜ್ಯದ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಉಚಿತವಾಗಿ ತರಬೇತಿ ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತರಬೇತಿ ಶಾಲೆ ಆರಂಭಿಸಲು ನಿರ್ಧರಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ್ತಿ ವೀರರಾಣಿ ಅಬ್ಬಕ್ಕ, ಉಡುಪಿ ಜಿಲ್ಲೆಯಲ್ಲಿ ತುಳುನಾಡಿನ ವೀರಪುರುಷರಾದ ಕೋಟಿ ಚೆನ್ನಯ, ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಹೆಂಜಾ ನಾಯಕ ಹೆಸರಿನಲ್ಲಿ ತರಬೇತಿ ಶಾಲೆ ಆರಂಭಿಸಲು ಜೂನ್ 20ರಂದು ಆದೇಶ ಹೊರಡಿಸಲಾಗಿದೆ.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳ ತರಬೇತಿಗೆ ತಗಲುವ ವೆಚ್ಚವನ್ನು ಇಲಾಖೆಯಿಂದ, ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ತಗಲುವ ವಾರ್ಷಿಕ ವೆಚ್ಚ ₹ 67.50 ಲಕ್ಷವನ್ನು ಸಮಾಜ ಕಲ್ಯಾಣ ಇಲಾಖೆಯಿಂದಲೇ ಭರಿಸುವ ಬಗ್ಗೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
‘4 ತಿಂಗಳ ವಸತಿಯುತ ತರಬೇತಿ’: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಪರಿಕಲ್ಪನೆಯಂತೆ ಸೇನಾ ಆಕಾಂಕ್ಷಿಗಳಿಗೆ ತರಬೇತಿಗಾಗಿ ಶಾಲೆ ಆರಂಭಿಸಲಾಗುತ್ತಿದೆ. ಕರಾವಳಿ ಭಾಗದಿಂದ ಹಲವು ಮಂದಿ ಮಿಲಿಟರಿ ಸೇವೆಗೆ ಸೇರಲು ಪ್ರಯತ್ನಿಸಿದರೂ ನಾನಾ ಕಾರಣದಿಂದ ವಿಫಲರಾಗುತ್ತಾರೆ. ಅವರನ್ನು ದೈಹಿಕ ಮತ್ತು ಲಿಖಿತ ಪರೀಕ್ಷೆಗೆ ತರಬೇತುಗೊಳಿಸುವ ಉದ್ದೇಶದಿಂದ ಶಾಲೆಗಳನ್ನು ಆರಂಭಿಸಲಾಗುತ್ತಿದೆ.
ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುತ್ತದೆ. ಇದು 4 ತಿಂಗಳ ವಸತಿಯುತ ತರಬೇತಿ. ತಲಾ 100 ಅಭ್ಯರ್ಥಿಗಳಿಗೆ ಅವಕಾಶ ನೀಡುವ ಚಿಂತನೆ ಇದೆ ಎಂದುಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಆಯುಕ್ತ ದಯಾನಂದ ಕೆ.ಎ. ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.