ಬೆಂಗಳೂರು: ಹಾಲಿನ ದರ ಹೆಚ್ಚಿಸಬೇಕು ಎಂದು 15 ಹಾಲು ಒಕ್ಕೂಟಗಳು ಮನವಿ ಮಾಡಿವೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದರವನ್ನು ಹೆಚ್ಚಿಸಿದರೆ ರೈತರಿಗೆ ಹಣ ವರ್ಗಾಯಿಸುವುದಾಗಿ ಸಂಘಗಳು ತಿಳಿಸಿವೆ ಎಂದರು.
‘ಯಾವುದೇ ಕಾರಣಕ್ಕೂ ಹಾಲಿನ ದರ ಹೆಚ್ಚಿಸಬಾರದು ಎಂದು ಗ್ರಾಹಕರು ಒತ್ತಡ ಹಾಕುತ್ತಿದ್ದಾರೆ. ಈ ವಿಷಯದ ಬಗ್ಗೆ ಮುಖ್ಯಮಂತ್ರಿಯವರ ಜತೆ ಚರ್ಚಿಸುತ್ತೇನೆ. ಹಾಲು ಒಕ್ಕೂಟಗಳ ಮನವಿಯ ವಿಚಾರ ಮುಖ್ಯಮಂತ್ರಿಯವರ ಗಮನದಲ್ಲಿದ್ದು, ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಿದ್ದಾರೆ ಎಂದು ಒಕ್ಕೂಟಗಳಿಗೆ ಭರವಸೆ ನೀಡಿದ್ದೇನೆ’ ಎಂದು ಹೇಳಿದರು.
ಸಹಕಾರ ಸಪ್ತಾಹ: 69 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಲಬುರಗಿಯಲ್ಲಿ ನ.14 ರಿಂದ 20 ರವರೆಗೆ ನಡೆಯಲಿದ್ದು, ‘ಭಾರತ 75 ಸಹಕಾರ ಸಂಸ್ಥೆಗಳ ಬೆಳವಣಿಗೆ ಮತ್ತು ಮುಂದಿನ ಭವಿಷ್ಯ’ ಈ ಬಾರಿಯ ಘೋಷ ವಾಕ್ಯವಾಗಿದೆ ಎಂದು ಸೋಮಶೇಖರ್ ಹೇಳಿದರು.
ನ 14 ರಂದು ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಅದೇ ದಿನಹಿರಿಯ ಸಹಕಾರಿಗಳಿಗೆ ‘ಸಹಕಾರ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ನ. 20 ರಂದು ಮೈಸೂರಿನಲ್ಲಿ ಸಮಾರೋಪ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.