ಮೈಸೂರು: ಗಣಿಗಾರಿಕೆ ನಡೆಸುವುದು ಅನಿವಾರ್ಯ. ಅಕ್ರಮವಾಗಿ ನಡೆಸುತ್ತಿದ್ದರೆ ಅರ್ಜಿ ಹಾಕಿ ಸಕ್ರಮ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶನಿವಾರ ಇಲ್ಲಿ ತಿಳಿಸಿದರು.
ರಾಜ್ಯದಲ್ಲಿ ದೊಡ್ಡಮಟ್ಟದಲ್ಲಿ ರಸ್ತೆಗಳು, ರಾಷ್ಟ್ರೀಯ ಹೆದ್ದಾರಿ ಹಾಗೂ ಇತರ ಕಾಮಗಾರಿಗಳು ನಡೆಯುತ್ತಿವೆ. ಇದಕ್ಕೆ ಪೂರಕವಾಗಿ ಗಣಿಗಾರಿಕೆ ನಡೆಯಲೇಬೇಕು. ಹೀಗಾಗಿ, ಅಕ್ರಮವಾಗಿ ಗಣಿಗಾರಿಕೆ ಮಾಡುತ್ತಿರುವವರು ಪರವಾನಗಿ ಪಡೆದು ಮುಂದುವರಿಯಬೇಕು ಎಂದರು.
ಅಕ್ರಮವಾಗಿ ಗಣಿಗಾರಿಕೆ ನಡೆಸಿದರೆ ಎಲ್ಲರಿಗೂ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಇದನ್ನೂ ಓದಿ:ಶಿವಮೊಗ್ಗ: ಮಾನವ ಹಸ್ತಕ್ಷೇಪದ ಭೂ ಕಂಪನ
ಇಂದು ಮಧ್ಯಾಹ್ನ ಶಿವಮೊಗ್ಗಕ್ಕೆ ಹೋಗಿ ಸ್ಫೋಟ ನಡೆದ ಸ್ಥಳ ಪರಿಶೀಲಿಸುತ್ತೇನೆ. ಈಗಾಗಲೇ ಮೃತ ಕುಟುಂಬಕ್ಕೆ ತಲಾ ₹ 5 ಲಕ್ಷ ಘೋಷಿಸಲಾಗಿದೆ. ಸೂಕ್ತ ಕ್ರಮಕ್ಕೆ ಈಗಾಗಲೇ ಸೂಚನೆ ನೀಡಿದ್ದೇನೆ. ಸುತ್ತಮುತ್ತಲಿನ ಮನೆಗಳಿಗೂ ಹಾನಿ ಆಗಿದೆ. ಇವರಿಗೂ ನ್ಯಾಯ ಒದಗಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಮೈಸೂರಿನಲ್ಲಿ ಜೆ.ಪಿ.ನಗರ ಶರಣ ವೇದಿಕೆ ವತಿಯಿಂದ ನಿರ್ಮಿಸಲಾದ ಅಕ್ಕಮಹಾದೇವಿ ಪ್ರತಿಮೆ ಅನಾವರಣಗೊಳಿಸಿದರು. ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಜಿ.ಟಿ.ದೇವೇಗೌಡ, ತನ್ವೀರ್ ಸೇಠ್, ಎಲ್.ನಾಗೇಂದ್ರ, ವಿವಿಧ ಪ್ರಾಧಿಕಾರ, ನಿಗಮ- ಮಂಡಳಿ, ಅಧ್ಯಕ್ಷರು, ಅಧಿಕಾರಿಗಳು ಭಾಗವಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.